ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ಆದೇಶ
ಬೆಂಗಳೂರು, ಜು. 2 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇನ್ನು ಮೂರು ತಿಂಗಳದೊಳಗೆ ಚುನಾವಣೆ ನಡೆಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಹೈಕೋರ್ಟ್ ಚುನಾವಣೆ ಆಯೋಗ ಹಾಗೂ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರು ಮಹಾನಗರ ಪಾಲಿಕೆಗೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಮಾಜಿ ಮೇಯರ್ ಪಿ.ಆರ್. ರಮೇಶ್ ಮತ್ತು ನಿಗಧಿತ ಅವಧಿಯಲ್ಲಿ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಎರಡೂ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಮತ್ತು ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿದ ನಂತರ ಈ ತೀರ್ಪು ನೀಡಿದೆ. ಅಕ್ಟೋಬರ್ ತಿಂಗಳ ಒಳಗೆ ಚುನಾವಣೆ ನಡೆಸಬೇಕಾದ ಅನಿವಾರ್ಯತೆ ಈಗ ಸರ್ಕಾರಕ್ಕೆ ಎದುರಾಗಿದೆ.
ಅರ್ಜಿದಾರರಾದ ಮಾಜಿ ಮೇಯರ್ ಪಿ.ಆರ್.ರಮೇಶ್ ಪರ ವಕೀಲರಾದ ನಾಗರಾಜರಾವ್ ವಾದಿಸಿದ್ದರು. ಚುನಾವಣೆ ಆಯೋಗದ ಪರ ವಕೀಲರಾದ ಪಣೀಂದ್ರ ವಾದಿಸಿದ್ದರು. ಕಳೆದ ಒಂದು ವರ್ಷ ಒಂಬತ್ತು ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಚುನಾವಣೆಗೆ ಚಾಲನೆ ಸಿಕ್ಕಿದೆ.
(ದಟ್ಸ್ಕನ್ನಡ ವಾರ್ತೆ)