ದೇಶವ್ಯಾಪಿ ಬಂದ್ಗೆ ರಾಜ್ಯದಲ್ಲಿ ಪಾಕ್ಷಿಕ ಬೆಂಬಲ
ಬೆಂಗಳೂರು, ಜು.3: ದೇಶದಾದ್ಯಂತ ಗುರುವಾರ ಬಂದ್ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಅಹಿತಕರ ಘಟನೆ ನಡೆಯದೆ ಪಾಕ್ಷಿಕ ಬೆಂಬಲ ವ್ಯಕ್ತವಾಗಿದೆ. ಕೆಲವು ಕಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಸಾರಿಗೆ ಸಂಸ್ಥೆಯ ಬಸ್ಸುಗಳು ರಸ್ತೆಗೆ ಇಳಿಯದ ಕಾರಣ ಪ್ರಯಾಣಿಕರು ತೊಂದರೆ ಅನುಭವಿಸಿದರು. ಆದರೆ ಬೆಂಗಳೂರಿನಲ್ಲಿ ಮಾತ್ರ ಬಂದ್ಗೆ ಅಷ್ಟಾಗಿ ಪ್ರತಿಕ್ರಿಯೆ ಕಂಡುಬಂದಿಲ್ಲ. ಸರ್ಕಾರಿ ಕಚೇರಿಗಳು ಹಾಗೂ ಸಾರಿಗೆ ವ್ಯವಸ್ಥೆ ಸಹ ಎಂದಿನಂತೆ ಕಾರ್ಯನಿರ್ವಹಿಸಿದವು.
ಯಾತ್ರಾರ್ಥಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಅಮರನಾಥ ದೇಗುಲಕ್ಕೆ ನೀಡಲಾಗಿದ್ದ ಜಮೀನನ್ನು ಜಮ್ಮು-ಕಾಶ್ಮೀರ ಸರ್ಕಾರ ವಾಪಸ್ ಪಡೆದಿದೆ. ಇದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮುಂತಾದ ಸಂಘಟನೆಗಳು ರಾಷ್ಟ್ರವ್ಯಾಪಿ ಬಂದ್ಗೆ ಕರೆ ನೀಡದ್ದವು. ಬಿಜೆಪಿ ಸಹ ಬೆಂಬಲ ಸೂಚಿಸಿದ್ದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.
ಬಂದ್ ಕಾರಣ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥವಾಯಿತು. ಈ ಜಿಲ್ಲೆಗಳಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದೆ ಜನ ಪರದಾಡುವಂತಾಯಿತು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಅಖಿಲ ಭಾರತ ಬಂದ್ಗೆ ಬಿಜೆಪಿ ಪಕ್ಷ ಬೆಂಬಲ ವ್ಯಕ್ತಪಡಿಸಿದ್ದರೆ, ರಾಜ್ಯ ಸರ್ಕಾರ ಬೆಂಬಲಿಸಿಲ್ಲ, ''ರಾಜ್ಯ ಸರ್ಕಾರ ಈ ಬಂದ್ಗೆ ಕರೆಕೊಟ್ಟಿಲ್ಲ. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ'' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಆದಾಗ್ಯೂ ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
(ದಟ್ಸ್ಕನ್ನಡ ವಾರ್ತೆ)