ಬಿಎಸ್ವೈ ಸಚಿವ ಸಂಪುಟಕ್ಕೆ ಮೂವರ ಸೇರ್ಪಡೆ
ಬೆಂಗಳೂರು, ಜು. 10 : ನಿರೀಕ್ಷೆಯಂತೆ ವಲಸಿಗರಿಗೆ ಬಿಜೆಪಿ ಮಣೆ ಹಾಕಿದೆ. ಪಕ್ಷದ ಹಿರಿಯರನ್ನು ಕಡೆಗಣಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ವಲಸೆ ಬಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಆನಂದ ಅಸ್ನೋಟಿಕರ್ ಮತ್ತು ಶಿವನಗೌಡ ನಾಯಕ್ ಅವರು ಇಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಗುರುವಾರ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮತ್ತು ಆನೇಕಲ್ ಶಾಸಕ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನದ ಭಾಗ್ಯ ದೊರೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ರೆಡ್ಡಿ ಮತ್ತು ಶ್ರೀರಾಮುಲು ಅವರ ಒತ್ತಾಯದ ಮೇರೆಗೆ ವಲಸೆ ಬಂದ ಮೂವರಿಗೆ ಸಚಿವ ಸ್ಥಾನ ದೊರಕಿದೆ.
ಜಗ್ಗೇಶ್ ಬಿಜೆಪಿ ಸೇರ್ಪಡೆ
ತುರುವೇಕೆರೆ ಶಾಸಕ, ನಟ ಜಗ್ಗೇಶ್ ಇಂದು ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಶಿಕಾರಪುರ ಮಾದರಿಯಲ್ಲೇ ತುರುವೇಕೆರೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದಾಗಿ ಘೋಷಿಸಿದರು. ನಂತರ ಮಾತನಾಡಿದ ಜಗ್ಗೇಶ್, ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಭವಿಷ್ಯದಲ್ಲಿ ಇನ್ನೂ 15 ವರ್ಷವಾದರೂ ಆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು. ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ ಜಗ್ಗೇಶ್, ಮುಂಬರುವ ಲೋಕಸಭೆ ಚುನಾವಣೆಗೆ ತುಮಕೂರಿನಿಂದ ಸ್ಪರ್ಧಿಸುವುದಾಗಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications