ಹೆಬ್ಬಾಳ ಜೆಸಿ ನಗರದಲ್ಲಿ ಶಾಂತಿ ಭಂಗ
ಬೆಂಗಳೂರು, ಜು. 11 : ನಗರದ ಹೆಬ್ಬಾಳ ಪ್ಲೈ ಓವರ್ ಬಳಿ ಇರುವ ಒಂದು ಪ್ರಾರ್ಥನಾ ಮಂದಿರ ಆವರಣ ಅಪವಿತ್ರಗೊಳಿಸಲು ದುಷ್ಕರ್ಮಿಗಳ ಸಂಚು ನಡೆಸಿದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಉದ್ರಿಕ್ತರ ಗುಂಪುನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ.ಘಟನೆಯಲ್ಲಿ ಒಬ್ಬ ಪೇದೆ ಸೇರಿ ಅನೇಕರು ಗಾಯಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವ ಘಟನೆ ಜೆಸಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಘಟನೆಯ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದು ಅಘೋಷಿತ ಬಂದ್ ಆಚರಿಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಎರಡು ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜಿಲಾಗಿದೆ. ಶುಕ್ರವಾರ ಪ್ರಾರ್ಥನಾ ಮಂದಿರ ಆವರಣವನ್ನು ಅಪವಿತ್ರಗೊಳಿಸಲು ಕಿಡಿಗೇಡಿಗಳು ಯತ್ನಿಸಿದ್ದಾರೆ ಎಂದು ತಿಳಿಯುತ್ತಿದ್ದಂತೆ ಜನರು ಗುಂಪಾಗಿ ಪ್ರತಿಭಟನೆ ನಡೆಸಲು ಆರಂಭಿಸಿದರು. ಕೆಲವಡೆ ರಸ್ತೆಗಳ ವೃತ್ತದಲ್ಲಿ ಪ್ರತಿಭಟನೆ ಆರಂಭವಾದವು. ಮತ್ತು ರಕ್ಷಣೆ ನೀಡಲು ಪೊಲೀಸರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರು ಜೆಸಿ ನಗರ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ ಒಬ್ಬ ಪೊಲೀಸ್ ಪೇದೆ ತೀವ್ರವಾಗಿ ಗಾಯಗೊಂಡಿದ್ದಾರೆ.
ಪ್ರತಿಭಟನೆ ಮುಂದುವರೆದಿದ್ದು, ಮುಂಜಾಗ್ರತ ಕ್ರಮವಾಗಿ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತ ಶಂಕರ ಬಿದರಿ ಸ್ಥಳಕ್ಕೆ ಭೇಟಿಕೊಟ್ಟು ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಪರಿಸ್ಥಿತಿ ಬಹುತೇಕ ಹತೋಟಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಶಾಸಕ ರೋಷನ್ ಬೇಗ್ ಉದ್ರಿಕ್ತಗೊಂಡ ಜನರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದರು. ರೋಷನ್ ಬೇಗ್ ಮತ್ತು ಪೊಲೀಸರ ಮಧ್ಯಸ್ಥಿಕೆಯಲ್ಲಿ ಮಂದಿರದ ಮುಖಂಡರೊಂದಿಗೆ ಕೋಮುಸೌಹಾರ್ಧ ಶಾಂತಿ ಸಂಧಾನ ನಡೆಸಿ ಪರಿಸ್ಥಿತಿ ತಿಳಿಗೊಳಿಸಲು ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರೋಷನ್ ಬೇಗ್, ಇದು ಕಿಡಿಗೇಡಿಗಳ ಕೆಲಸ, ರಾಜಕೀಯ ಲಾಭ ಪಡೆಯುವುದರ ಜತೆಗೆ ಧಾರ್ಮಿಕ ಭಾವನೆಗಳನ್ನು ಕದಡಲು ಈ ಕೃತ್ಯ ಎಸಗಲಾಗಿದೆ. ಇದರ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬಾರದು ಎಂದು ಮನವಿ ಮಾಡಿಕೊಂಡರು. ಮಂದಿರ ಕಾವಲಿಗೆ ಸ್ಥಳೀಯರನ್ನು ನೇಮಿಸಲು ನಿರ್ಧರಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)