ವರ್ಷಾಂತ್ಯಕ್ಕೆ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ
ಬೆಳಗಾವಿ, ಜು. 13 : ಈ ವರ್ಷದ ಅಂತ್ಯದಲ್ಲಿ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ನಡೆಸಲಾಗುವುದು. ಸಮ್ಮೇಳನದ ಮೂಲ ಸೌಕರ್ಯಗಳ ಸುಧಾರಣೆಗೆ 20 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ನಗರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಶ್ವಕನ್ನಡ ಸಮ್ಮೇಳನಕ್ಕಾಗಿ ವಿಶೇಷ ಸಮಿತಿಯನ್ನು ರಚಿಸಲಾಗಿದ್ದು, ಅದರ ಸಿದ್ಧತೆ ಭರದಿಂದ ಸಾಗಿದೆ ಎಂದರು. ಬೆಳಗಾವಿಯಲ್ಲಿ ಪ್ರತಿವರ್ಷ ವಿಧಾನಮಂಡಲ ಅಧಿವೇಶನ ನಡೆಸಲಾಗುವುದು ಎಂದ ಯಡಿಯೂರಪ್ಪ, ಅಧಿವೇಶನ ನಡೆಸಲು ಅನುವಾಗುವಂತೆ ಬೆಳಗಾವಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಸುವರ್ಣ ಸೌಧದ ಸ್ಥಳ ಆಯ್ಕೆಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ಅವರು ಭರವಸೆ ನೀಡಿದರು.
ಬೆಳಗಾವಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು 375 ಎಕರೆ ಜಮೀನು ಬೇಕಾಗಿದೆ. ಇದಕ್ಕೆ ಅಗತ್ಯ ಹಣ ಬಿಡುಗಡೆ ಮಾಡಲಾಗುವುದು. ಇದರಂತೆ ಬೆಳಗಾವಿ ಜಿಲ್ಲೆಯಲ್ಲಿ ವೈನ್ ಪಾರ್ಕ್ ನಿರ್ಮಿಸುವ ಅಗತ್ಯವಿದೆ ಎಂಬ ಬೇಡಿಕೆಯಿದೆ. ಈ ನಿಟ್ಟಿನಲ್ಲಿನಲ್ಲಿಯೂ ಸರ್ಕಾರ ಗಮನಹರಿಸಲಿದೆ ಎಂದು ಯಡಿಯೂರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)