ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯುವ ಸಾಧ್ಯತೆ!
ಬೆಂಗಳೂರು, ಆ. 5 : ಇತ್ತೀಚಿನ ದಿನಗಳಲ್ಲಿ ಸಮರ್ಥ ನಾಯಕರಿಲ್ಲದೆ ಸೊರಗಿದಂತಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನಗೊಳಿಸಲು ಎಐಸಿಸಿ ನಿರ್ಧರಿಸಿದೆ. ಯುವಕರಿಗೆ ಅಧ್ಯತೆ ನೀಡುವ ದೃಷ್ಟಿಯಿಂದ ಪಕ್ಷದ ಪ್ರಭಾವಿ ನಾಯಕ ಹಾಗೂ ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಈ ಕುರಿತ ಆದೇಶ ಸದ್ಯದಲ್ಲಿಯೇ ಹೊರಬೀಳುವ ಸಾಧ್ಯತೆಗಳಿವೆ.
ಕಳೆದ ನಾಲ್ಕು ವರ್ಷಗಳಿಂದ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಚುನಾವಣೆಯಲ್ಲಿ ಹೀನಾಯ ಮುಖಭಂಗ ಅನುಭವಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತ ಕಾಂಗ್ರೆಸ್ ಪಕ್ಷಕ್ಕೆ ಹಾಳೂರಿಗೆ ಉಳಿದವನೇ ಗೌಡ ಎನ್ನುವ ಗಾದೆಯ ಹಾಗೆ, ಪ್ರತಿಪಕ್ಷದ ನಾಯಕ ಸ್ಥಾನವನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರೇ ಅಲಂಕರಿಸಿದರು. ಖಾಲಿ ಇದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಲಾಬಿ ನಡೆದಿತ್ತು. ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ಹೆಸರುಗಳು ಕೇಳಿ ಬಂದಿತ್ತು. ಕೊನೆಯದಾಗಿ ಡಿ.ಕೆ.ಶಿವಕುಮಾರ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.
ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಕಳೆದ ಕೆಲ ದಿನಗಳ ಹಿಂದೆ ಪಕ್ಷದ ನೇತೃತ್ವವನ್ನು ಯುವಕರು ವಹಿಸಿಕೊಳ್ಳುವುದು ಸೂಕ್ತ ಎನ್ನುವ ಮಾತುಗಳನ್ನಾಡಿದ್ದರು. ರಾಹುಲ್ ಗಾಂಧಿ ಅವರ ಪರಮಾಪ್ತರಾಗಿರುವ ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಕೃಷ್ಣ ಭೈರೇಗೌಡ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಇದರ ಬೆನ್ನಲ್ಲೇ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿಸಿ ಎಂದು ಪಕ್ಷದ ಹಿರಿಯ ಮುಖಂಡರು ಹೈಕಮಾಂಡ್ ಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
ಇನ್ನೊಂದು ಮೂಲಗಳು ಪ್ರಕಾರ ಸಿದ್ಧರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಈ ಬಗ್ಗೆ ಅವರೂ ಕೂಡಾ ಆಸಕ್ತಿ ವಹಿಸಿದ್ದರು. ನಂತರ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯಾದ ಹಿನ್ನೆಲೆಯಲ್ಲಿ ಸಿದ್ದು ಅಧ್ಯಕ್ಷನಾಗಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಕೆಪಿಸಿಸಿ ಅದ್ಯಕ್ಷತೆ ಯಾರ ಮುಡಿಗೆ?