ಎಸ್ಎಸ್ಎಲ್ ಸಿ ಪರೀಕ್ಷಾ ಪದ್ಧತಿ ಬದಲಾವಣೆಯಿಲ್ಲ
ಬೆಂಗಳೂರು, ಆ.7 : ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಪದ್ಧತಿಯನ್ನು ಬದಲಾವಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಳೆದ ಕೆಲ ದಿನಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮನೆ ಮಾಡಿದ್ದ ಆತಂಕ ದೂರವಾದಂತಾಗಿದೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಎಸ್ ಎಲ್ ಸಿ ಪರೀಕ್ಷೆಯ ಗುಣಮಟ್ಟ ದೋಷದಿಂದ ಕೂಡಿದ್ದು, ಈ ಬಗ್ಗೆ ಅನೇಕ ದೂರಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಪರೀಕ್ಷಾ ಪದ್ಧತಿಯನ್ನು ಬದಲಾವಣೆ ಮಾಡಲಾಗುವುದು ಎಂದರು. ಇಂದಿನ ಎಸ್ಎಸ್ಎಲ್ ಸಿ ಪರೀಕ್ಷಾ ಪದ್ಧತಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತುಂಬಾ ಹಾನಿಯಾಗುತ್ತಲಿದೆ. 60:40ರ ಅನುಪಾತದಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಆದರಲ್ಲಿ 60 ಅಂಕಗಳಿಗೆ ವಸ್ತುನಿಷ್ಠ ಮಾದರಿ ಪ್ರಶ್ನೆಗಳು ಇರುತ್ತವೆ. ಇನ್ನುಳಿದೆ 40 ಅಂಕಗಳಿಗೆ ವಿಸ್ತೃತವಾಗಿ ಬರೆಯಬೇಕಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಜಯಲಕ್ಷ್ಮಿ ಸಮಿತಿ ಸರ್ಕಾರಕ್ಕೆ ವರದಿ ನೀಡಿದ ಹಿನ್ನಲೆಯಲ್ಲಿ ಕಳೆದ ಸರ್ಕಾರ ಜಾರಿಗೆ ತಂದಿತ್ತು.
ಆದರೆ ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಹಾನಿ ಎನ್ನುವ ವಿಷಯ ನಂತರ ದಿನಗಳಲ್ಲಿ ಬೆಳಕಿಗೆ ಬಂದಿದ್ದು, ಶ್ರೀಕಂಠಯ್ಯ ಸಮಿತಿಯನ್ನು ರಚಿಸಲಾಯಿತು ಅದರಲ್ಲೂ ಕೂಡಾ ಅನೇಕ ಗೊಂದಲಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸದ್ಯದ ಪರೀಕ್ಷಾ ಪದ್ಧತಿಯನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷಾ ಪದ್ಧತಿಯನ್ನು ಬದಲಾವಣೆ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)