ಬಸ್ ದರ ಏರಿಕೆಗೆ ದೇವೇಗೌಡ ವಿರೋಧ
ಹಾಸನ, ಆ. 29 : ಬಿಜೆಪಿ ಸರ್ಕಾರ ಜನರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಹಮ್ಮಿಕೊಳ್ಳುವುದನ್ನು ಬಿಟ್ಟು ಮಾರಕವಾಗುವಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಜನರ ಜೀವನವನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜಲಾವೃತವಾಗಿ ಅಪಾರ ನಷ್ಟ ಅನುಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ದರ ಏರಿಸುವುದಕ್ಕಿಂತ ಮೂದಲ ಮುಂಚೆ ಪ್ರಕೃತಿ ವಿಕೋಪಕ್ಕೆ ಸಿಲುಕಿ ತೊಂದರೆ ಅನುಭವಿಸುತ್ತಿರುವ ಜನರ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ ಎಂದರು.
ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ದರ ಏರಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇಂಥ ಕೆಟ್ಟ ಸರ್ಕಾರದ ಆಡಳಿತವನ್ನು ಜನ ಅನುಭವಿಸುವಂತಾಗಿದೆ. ಸರ್ಕಾರ ಅಧಿಕಾರಕ್ಕೆ ಮೂರು ತಿಂಗಳ ಕಳೆಯುತ್ತ ಬಂದಿದೆ. ಇಲ್ಲಿಯವರೆಗೂ ಹೇಳಿಕೊಳ್ಳುವಂಥ ಕೆಲಸ ಮಾಡಿಲ್ಲ ಎಂದು ಆರೋಪಿಸಿದ ಅವರು, ಆಪರೇಷನ್ ಕಮಲ ಹೆಸರಿನಲ್ಲಿ ಗಮನಾರ್ಹ ಸಾಧನೆ ಮಾಡಿರುವ ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಸರ್ಕಾರದ ಸಾಧನೆ ಶೂನ್ಯ ಎಂದು ವ್ಯಂಗ್ಯವಾಡಿದರು.
ಕಳೆದ ಮೂರು ದಿನಗಳಿಂದ ಹಾಸನ ಜಿಲ್ಲೆಯಾದ್ಯಂತ ವರುಣನ ಆರ್ಭಟ ಇಂದು ಕೂಡಾ ಮುಂದುವರೆದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಗ್ರಾಮಗಳು ಪ್ರವಾಹದಲ್ಲಿ ಮುಳುಗಿವೆ. ಪ್ರಮುಖ ಕೆರೆಗಳು ಒಡೆದಿದ್ದರಿಂದ ಅನೇಕ ಜಮೀನು ನೀರು ಪಾಲಾಗಿವೆ. ಕೋಟ್ಯಂತರ ರುಪಾಯಿ ನಷ್ಟವಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಬಿಎಂಟಿಸಿ, ಕೆಎಸ್ ಆರ್ ಟಿಸಿಬಸ್ ದರದಲ್ಲಿ ಏರಿಕೆ












Click it and Unblock the Notifications