ರೈತರ ಪರಿಹಾರಕ್ಕೆ ಒತ್ತಾಯಿಸಿ ಬೀದಿಗಿಳಿದ ರೇವಣ್ಣ
ಹಾಸನ, ಸೆ. 4 : ಇತ್ತೀಚೆಗೆ ಸುರಿದ ಮಳೆಯ ರುದ್ರನರ್ತನದಿಂದ ಹಾಸನ ಜಿಲ್ಲೆಯ ಆಲೂಗಡ್ಡೆ ಬೆಳೆ ಸಂಪೂರ್ಣ ನಾಶವಾಗಿರುವ ಕಾರಣ ಶೀಘ್ರದಲ್ಲಿ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ.
ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಆಲೂಗಡ್ಡೆ ಬೆಳೆ ಸಂಪೂರ್ಣ ನಾಶವಾಗಿದೆ. ಇದರಿಂದ ಜಿಲ್ಲೆಯ ರೈತರಿಗೆ ಸುಮಾರು 100 ಕೋಟಿ ರುಪಾಯಿ ನಷ್ಟವಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ವರದಿಯನ್ನು ರವಾನಿಸಲಾಗಿದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲಿಯವರೆಗೂ ಒಂದು ಬಿಡಿಗಾಸು ಪರಿಹಾರ ನೀಡಲು ಮನಸ್ಸು ಮಾಡುತ್ತಿಲ್ಲ ಎಂದು ರೇವಣ್ಣ ಆರೋಪಿಸಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದಿದೆ. ಅವರು ಅಧಿಕಾರಕ್ಕೆ ಬಂದಾಗನಿಂದಲೂ ಜಿಲ್ಲೆಗೆ ಒಂದೇ ಒಂದು ರುಪಾಯಿಯನ್ನು ಬಿಡುಗಡೆ ಮಾಡಿಲ್ಲ. ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಕುಂಟಿತವಾಗಿವೆ. ಇದು ಉದ್ದೇಶಪೂರ್ವಕ ಕೆಲಸವಲ್ಲದೇ ಮತ್ತೇನು ಅಲ್ಲ ಎಂದು ಅವರು ಕಿಡಿಕಾರಿದರು. ಮಳೆಯ ಹೊಡೆತಕ್ಕೆ ಬೆಳೆ ಕಳೆದುಕೊಂಡು ಈಗಾಗಲೇ ಒಬ್ಬ ರೈತ ಮೃತಪಟ್ಟಿದ್ದಾನೆ. ಅಷ್ಟಾದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸರ್ಕಾರದ ನಿರ್ಲಕ್ಷ್ಯ ಹೀಗೆ ಮುಂದುವರೆದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ರೇವಣ್ಣ ಸರ್ಕಾರಕ್ಕೆ ಎಚ್ಚರಿಸಿದರು.
ಬೆಳೆ ಹಾನಿಗೆ ಸಂಬಂಧಿಸಿಂತೆ ರಾಜ್ಯದ ಉಳಿದ ಜಿಲ್ಲೆಗಳಿಗೆ ಪರಿಹಾರ ನೀಡಿರುವ ಮುಖ್ಯಮಂತ್ರಿಗಳು, ಹಾಸನ ಜಿಲ್ಲೆಗೆ ಮಾತ್ರ ಏಕೆ ಪರಿಹಾರ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿದೆ ಎಂದು ದ್ವೇಷ ರಾಜಕೀಯ ಮಾಡುವುದು ಸರಿಯಲ್ಲ. ವೈಷಮ್ಯ ಮರೆತು ಶೀಘ್ರದಲ್ಲಿ ಬೆಳೆ ಪರಿಹಾರ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಇನ್ನಷ್ಟು ಉಗ್ರರೂಪ ತಾಳಲಿದೆ ಎಂದರು. ಪ್ರತಿಭಟನೆಯಲ್ಲಿ ಶಾಸಕ ಸಿ.ಎಸ್.ಪುಟ್ಟೇಗೌಡ, ಎಸ್.ಎಸ್.ಪ್ರಕಾಶ್ ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)