ಸೊರಬದಲ್ಲಿ ದಿನಗೂಲಿ ನೌಕರನ ಆತ್ಮಹತ್ಯೆ
ಸೊರಬ, ಸೆ. 5 : ಸೇವೆ ಖಾಯಂಗೊಳ್ಳದಿರುವ ಹಿನ್ನೆಲೆಯಲ್ಲಿ ಸರ್ಕಾರದ ಇಲಾಖೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ದಿನಗೂಲಿ ನೌಕರನೂಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ.
ಲೋಕೋಪಯೋಗಿ ಇಲಾಖೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಕೆಂಚೇಗೌಡ ಮೃತಪಟ್ಟ ದುರ್ದೈವಿ. ಈತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದವನಾಗಿದ್ದು, ಕಳೆದ ಅನೇಕ ವರ್ಷಗಳಿಂದ ಸರ್ಕಾರಿ ಕಚೇರಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಆದರೆ ಸೇವೆ ಖಾಯಂಗೊಳಿಸಲು ಹರಸಾಹಸ ಪಟ್ಟರೂ ಪ್ರಯೋಜನವಾಗಿರಲಿಲ್ಲ. ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಬರೀ ಭರವಸೆಯನ್ನು ನೀಡುತ್ತವೆಯೇ ಹೊರತು ಸೇವೆ ಖಾಯಂ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಂಗಳೂರು ನಡೆದ ದಿನಗೂಲಿ ನೌಕರರ ಬೃಹತ್ ಪ್ರತಿಭಟನೆಯಲ್ಲಿ ಕೆಂಚೇಗೌಡ ಆತ್ಮಹತ್ಯೆ ಪ್ರಯತ್ನಿಸಿದ್ದ. ಆಗ ಲೋಕೋಪಯೋಗಿ ಸಚಿವರಾಗಿದ್ದ ಎಚ್.ಡಿ.ರೇವಣ್ಣ ದಿನಗೂಲಿ ನೌಕರರ ಸೇವೆ ಖಾಯಂ ಮಾಡುವ ಕುರಿತು ಶೀಘ್ರದಲ್ಲಿ ಮಾತುಕತೆ ಕರೆದು ಖಾಯಂ ಮಾಡುವ ಭರವಸೆಯನ್ನು ನೀಡಿದ್ದರು. ನಂತರ ರಾಜಕೀಯ ಬದಲಾವಣೆಯಿಂದ ಅದು ನೆನೆಗುದಿಗೆ ಬಿದ್ದಿತ್ತು. ಇದರಿಂದ ತೀವ್ರ ಮನನೊಂದ ಕೆಂಚೇಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications