ರೇಸ್ ಕೋರ್ಸ್ ಸ್ಥಳಾಂತರಕ್ಕೆ ರಾಜ್ಯ ಸಂಪುಟ ಅಸ್ತು
ಬೆಂಗಳೂರು, ಸೆ. 5 : ರೇಸ್ ಕೋರ್ಸ್ ಸ್ಥಳಾಂತರ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ರೈತರ ಮಕ್ಕಳಿಗೆ ಶೈಕ್ಷಣಿಕ ಸಹಾಯ ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳನ್ನು ನೂರು ದಿನ ಪೂರೈಸಿದ ಸಂದರ್ಭದಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿದೆ.
ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಗರದ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ಅನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲು ಸಂಪುಟ ಅನುಮೋದನೆ ನೀಡಿದೆ. ಸ್ಥಳ ನಿಗದಿ ಕುರಿತಂತೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಪತ್ರಕರ್ತರಿಗೆ ಗುರುವಾರ ವಿವರಣೆ ನೀಡಿದರು.
ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹಾಲು ಉತ್ಪಾದಕರಿಗೆ 2 ರು. ಪ್ರೋತ್ಸಾಹ ಧನವನ್ನು ನೀಡಲಾಗುವುದು. ಇದು ಸೆಪ್ಟೆಂಬರ್ 9ರಿಂದ ಜಾರಿಗೆ ತರಲಾಗುವುದು ಮತ್ತು ಪ್ರೋತ್ಸಾಹ ಧನವನ್ನು ರೈತನ ಹೆಂಡತಿಯ ಹೆಸರಿನಲ್ಲಿ ಜಮಾ ಮಾಡಲಾಗುವುದು ಎಂದು ಕರಂದ್ಲಾಜೆ ತಿಳಿಸಿದರು.
ರೈತರ ಮಕ್ಕಳಿಗೆ ಶೈಕ್ಷಣಿಕವಾಗಿ ಸಹಾಯವಾಗುವಂತೆ ಶೇ. 6 ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು. ಇದರು ಆಗಸ್ಟ್ ತಿಂಗಳಿನಿಂದಲೇ ಜಾರಿ ಬರಲಿದೆ. ಸಾಲವನ್ನು ಸಹಕಾರಿ ಬ್ಯಾಂಕ್ ವತಿಯಿಂದ ರೈತರಿಗೆ ಒದಗಿಸಲಾಗುವುದು ಎಂದು ಸಚಿವೆ ಹೇಳಿದರು.
ಅಮೆರಿಕಾದಲ್ಲಿ ಗಾಂಧೀಜಿ ಸಂದೇಶ ಸಾರಲು ಫೌಂಡೇಶನ್ ಸ್ಥಾಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)