ಬಸವ ಕಲ್ಯಾಣದಲ್ಲಿ ಲಾರಿ ಟಂಟಂ ಢಿಕ್ಕಿ: 7 ಸಾವು
ಬಸವ ಕಲ್ಯಾಣ, ಸೆ. 5 : ಟಂಟಂ ಅಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ಟಂಟಂ ಪಲ್ಟಿಯಾಗಿ ಅದರಲ್ಲಿದ್ದ ಏಳು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಶುಕ್ರವಾರ ಬೆಳಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 9ರ ಹತ್ತಿರ ಇರುವ ಚಿದ್ರಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ರಾಜೇಶ್ವರದಿಂದ ಹುಮ್ನಾಬಾದ್ ಗೆ ತೆರಳುತ್ತಿದ್ದ ಟಂಟಂ ಅಟೋ ಎದುರಿಗೆ ಬರುತ್ತಿದ್ದ ಲಾರಿಗೆ ಹೊಡೆದಿದೆ. ಡಿಕ್ಕಿಯಾದ ತಕ್ಷಣ ಟಂಟಂ ಅಟೋ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ಏಳು ಜನ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಬಾಲಕ ಎಂದು ಗುರುತಿಸಲಾಗಿದೆ. ಮೂವರು ತೀವ್ರ ಗಾಯಗೊಂಡಿದ್ದು, ಹುಮ್ನಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೃತಪಟ್ಟವರು ಹುಮ್ನಾಬಾದ್ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಟಂಟಂ ಅಟೋದಲ್ಲಿ 15ಕ್ಕೂ ಜನರು ಪ್ರಯಾಣಿಸುತ್ತಿದ್ದರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)