ಖರ್ಗೆ-ಸೋನಿಯಾ ಭೇಟಿ, ಸಿದ್ದು ಬಳಗದಲ್ಲಿ ಕಳವಳ
ಬೆಂಗಳೂರು, ಸೆ. 10 : ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನುತ್ತಿರುವಾಗಲೇ ಖರ್ಗೆ ಮತ್ತು ಸೋನಿಯಾಗಾಂಧಿ ಭೇಟಿ ಹಲವಾರು ಅನುಮಾನಗಳಿಗೆ ಕಾರಣವಾಗಿದ್ದುಸಿದ್ದು ಬಳಗದಲ್ಲಿ ಕಳವಳ ಉಂಟು ಮಾಡಿದೆ.
ಕಳೆದ ಅನೇಕ ತಿಂಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಉಳಿದಿದ್ದು, ಸಿದ್ದರಾಮಯ್ಯ ಆಯ್ಕೆ ಖಚಿತ ಎನ್ನುವಾಗಲೇ ವಲಸಿಗರು ಹಾಗೂ ಮೂಲ ಕಾಂಗ್ರೆಸ್ಸಿಗರು ಎಂಬ ಸಮಸ್ಯೆ ಹುಟ್ಟಿಕೊಂಡಿತ್ತು. ಮೂಲ ಕಾಂಗ್ರೆಸ್ಸಿಗರಾದ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಹಾಗೂ ಹಿರಿಯ ಮುಖಂಡ ಜಾಫರ್ ಷರೀಫ್ ನೇತೃತ್ವದಲ್ಲಿ ಸಭೆ ನಡೆಯಿತು. ಮೂಲ ಕಾಂಗ್ರೆಸ್ಸಿಗರನ್ನೆ ಕೆಪಿಸಿಸಿ ಅಧ್ಯಕ್ಷರನ್ನಾಗಿಸಬೇಕು ಎನ್ನುವ ತಂತ್ರ ರೂಪಿಸಿ ಸೋನಿಯಾ ಗಾಂಧಿ ಅವರ ಮೇಲೆ ಒತ್ತಡ ಹಾಕುವ ಪ್ರಯತ್ನವೂ ನಡೆಯಿತು. ಇದಾದ ನಂತರ ಸಿದ್ದು ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸಿದರು. ಆನಂತರ ಅವರು, ವರಿಷ್ಠರು ಜವಾಬ್ದಾರಿ ವಹಿಸಿದರೆ ಕೆಪಿಸಿಸಿ ಅಧ್ಯಕ್ಷನಾಗಲು ಸಿದ್ದ ಎಂದು ಹೇಳಿದ್ದರು.
ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಖರ್ಗೆ ಇಂದು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿದೆ. ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಡಿ.ಬಿ.ಚಂದ್ರೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಪ್ರಸ್ತುತ ರಾಜಕೀಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ಖರ್ಗೆ ಅವರು ಸೋನಿಯಾಗಾಂಧಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಕೆಪಿಸಿಸಿ ಅಧ್ಯಕ್ಷಗಿರಿಗೆ ಸಿದ್ದು ದೆಹಲಿಯಲ್ಲಿ ಕಸರತ್ತು
ಮೂಲಕ್ಕೆ ಕೊಡಲಿ, ರಾಜ್ಯ ಕಾಂಗೈಗಳ ಸಿಡಿಮಿಡಿ












Click it and Unblock the Notifications