ಮಂಗಳೂರು ಮುಂದುವರೆದ ಉದ್ವಿಗ್ನ ಪರಿಸ್ಥಿತಿ
ಮಂಗಳೂರು, ಸೆ. 15 : ಮತಾಂತರ ವಿವಾದಕ್ಕೆ ಸಂಬಂಧಿಸಿದಂತೆ ಭಾನುವಾರ ಭಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯನ್ನು ಖಂಡಿಸಿ ಮತ್ತೆ ಪ್ರತಿಭಟನೆಗಳು ಮುಂದುವರೆದಿದೆ. ಇಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಗುಂಪು ಚದುರಿಸಲು ಪೊಲೀಸರು ಅಶ್ರವಾಯು ಪ್ರಯೋಗಿಸಿ ಲಾಠಿ ಜಾರ್ಜ್ ನಡೆಸಿರುವ ಘಟನೆ ಸೋಮವಾರ ನಡೆದಿದೆ.
ಕಲ್ಲು ತೂರಾಟದಲ್ಲಿ ಐವರು ಪೊಲೀಸರಿಗೆ ಗಾಯವಾಗಿದೆ. ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾದ 75 ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನಗರದ ಕುಲಶೇಖರ, ಉಲ್ಲಾಲ್, ವಾಮಂಜೂರು ಚರ್ಚ್ ಗಳ ಮುಂದೆ ಕ್ರೈಸ್ತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿವೆ. ಚರ್ಚ್ ಗಳ ಮೇಲೆ ದಾಳಿ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕ್ರೈಸ್ತ ಮುಖಂಡರು ಆಗ್ರಹಿಸಿದ್ದಾರೆ. ನಗರದಲ್ಲಿ ಅಪರಾಧಿ ಪ್ರಕ್ರಿಯೆ ಸಂಹಿತೆ(ಸಿಆರ್ ಪಿಸಿ) 144 ಸೆಕ್ಷನ್ ಅನ್ವಯ ಮೂರು ದಿನಗಳ ಕಾಲ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಭಂಟ್ವಾಳಕ್ಕೂ ಕೂಡ ನಿಷೇಧಾಜ್ಞೆ ವಿಸ್ತರಿಸಲಾಗಿದೆ.
ನಗರದಾದ್ಯಂತ ಅಘೋಷಿತ ಬಂದ್ ಆಚರಿಸಲಾಗುತ್ತಿದೆ. ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜನಸಾಮಾನ್ಯರು ಭಯಭೀತರಾಗಿ ಮನೆಯಲ್ಲಿರುವುದರಿಂದ ನಗರ ಬಿಕೋ ಎನ್ನತೊಡಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐವರು ಪೊಲೀಸರಿಗೆ ಗಾಯವಾಗಿದೆ.
ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಭಜರಂಗದಳ ಕಾರ್ಯಕರ್ತರು ಏಕಕಾಲದಲ್ಲಿ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಜಿಲ್ಲೆಯಲ್ಲಿರುವ ಆರು ಚರ್ಚ್ ಗಳ ದಾಳಿ ನಡೆಸಿ ಪಿಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಭಾನುವಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪರಿಸ್ಥಿತಿ ಉದ್ನಿಗ್ನಗೊಂಡಿದ್ದರಿಂದ ಲಾಠಿ ಪ್ರಹಾರ ನಡೆಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಚರ್ಚ್ ಮೇಲೆ ದಾಳಿ: ಮಂಗಳೂರಿಗೆ ಸಿಎಂ ಭೇಟಿ
ಮತಾಂತರ : ಮಂಗಳೂರು ಉದ್ವಿಗ್ನ, ನಿಷೇಧಾಜ್ಞೆ ಜಾರಿ












Click it and Unblock the Notifications