ಕಾನೂನು ಕೈಗೆತ್ತಿಕೊಂಡರೆ ಉಗ್ರ ಕ್ರಮ:ಬಿಎಸ್ ವೈ
ಬೆಂಗಳೂರು, ಸೆ. 16 : ಕಾನೂನಿನಲ್ಲಿ ಮತಾಂತರಕ್ಕೆ ಅವಕಾಶವಿಲ್ಲ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಮಂಗಳೂರು ಗಲಭೆ ಕುರಿತು ನಗರದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಹಾಗೂ ಪೊಲೀಸ್ ಮಹಾ ನಿರ್ದೇಶಕ ಶ್ರೀಕುಮಾರ್ ಸೇರಿ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಅವರು ಮಾತನಾಡುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಬಂದ್ ಗೆಕರೆ ನೀಡುವುದು, ಕಲ್ಲು ತೂರಾಟ ನಡೆಸುವ ಕ್ರಮವನ್ನು ಸಹಿಸುವುದು ಸಾಧ್ಯವೇ ಇಲ್ಲ ಎಂದ ಯಡಿಯೂರಪ್ಪ, ಬಂದ್ ಗೆ ಕರೆ ನೀಡುವವರನ್ನು ಬಂಧಿಸುವಂತೆ ಈಗಾಗಲೇ ಆದೇಶ ನೀಡಲಾಗಿದೆ. ಸಮಾಜದ ಸಾಮರಸ್ಯ ಕದಡಲು ಯತ್ನಿಸಿದರೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಅಮಾಯಕ ಜನರಿಗೆ ವಿವಿಧ ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದು ಕಾನೂನು ವಿರೋಧಿಯಾಗಿದೆ. ಮತಾಂತರ ಮಾಡುವವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ತೀಕ್ಷ್ಣವಾಗಿ ಹರಿಹಾಯ್ದ ಯಡಿಯೂರಪ್ಪ, ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 171 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು. ಗೃಹ ಸಚಿವ ವಿ.ಎಸ್.ಆಚಾರ್ಯ ಅವರು ಸ್ಥಳದಲ್ಲಿ ಮುಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಲು ಅವಕಾಶ ನೀಡಬಾರದು ಎಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಸಿಡಿಮಿಡಿಗೊಂಡ ಖರ್ಗೆ
ಕೋಮು ದಳ್ಳುರಿಯಿಂದ ನರಳ ತೊಡಗಿರುವ ಮಂಗಳೂರಿಗೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ ಸೇರಿ ಅನೇಕ ಕಾಂಗ್ರೆಸ್ ಮುಖಂಡರು ಮಂಗಳೂರಿನ ವಿವಿಧ ಚರ್ಚ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮಂಗಳೂರಿನ ಕೋಮು ಗಲಭೆಗೆ ರಾಜ್ಯದ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದ ವೈಫಲ್ಯವೇ ಈ ದುರಂತಕ್ಕೆ ಕಾರಣವಾಗಿದೆ. ಸಂಘ ಪರಿವಾರ ತನ್ನ ಕಾರ್ಯಕರ್ತರನ್ನು ಹದ್ದುಬಸ್ತಿನಲ್ಲಿಡಬೇಕು ಎಂದು ಆಗ್ರಹಿಸಿದ ಅವರು, ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ರಾಜ್ಯದಲ್ಲಿ ಅಲ್ಪಸಂಖ್ಯಾತರ ಜೀವನ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಖರ್ಗೆ ಎಚ್ಚರಿಕೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಮತ್ತೆ ನಾಲ್ವರಿಗೆ ಚೂರಿ ಇರಿತ
ಬಲವಂತ ಮತಾಂತರ ವಿರುದ್ಧ ಈಶ್ವರಪ್ಪ ಎಚ್ಚರಿಕೆ












Click it and Unblock the Notifications