ದೇವೇಗೌಡರ ಸಖ್ಯಕ್ಕೆ ದೇಶಪಾಂಡೆ ಒಲವು
ಬೆಂಗಳೂರು,ಸೆ. 27 : ಮುಂಬರುವ ಉಪಚುನಾವಣೆ ಹಾಗೂ ಲೋಕಸಭೆ ಚುನಾವಣೆಗೆ ಜಾತ್ಯಾತೀತ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರು ಕಾಂಗ್ರೆಸ್ ಹೈಕಮಾಂಡ್ ಮುಂದಿಟ್ಟಿರುವ ಮೈತ್ರಿ ಪ್ರಸ್ತಾಪವನ್ನು ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ.
ಶುಕ್ರವಾರದಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಜಾತ್ಯಾತೀತ ಪಕ್ಷಗಳು ಒಂದಾಗುವುದರಿಂದ ಕೋಮುವಾದಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬಹುದು ಎಂದರು. ಜೆಡಿಎಸ್ ಮುಖಂಡರು ಮಾಡಿದ ಒಂದೇ ಒಂದು ತಪ್ಪಿನಿಂದಾಗಿ ಇಂದು ಭಾರಿ ಬೆಲೆ ತೆರಬೇಕಾಗಿದೆ ಎಂದು ಪರೋಕ್ಷವಾಗಿ ಬಿಜೆಪಿಯನ್ನು ಟೀಕಿಸಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕಾದರೆ ಜಾತ್ಯಾತೀತ ಪಕ್ಷಗಳು ಒಗ್ಗೂಡಬೇಕು ಎಂದು ಅಭಿಪ್ರಾಯಪಟ್ಟರು. ದೇವೇಗೌಡ ಜತೆಗೆ ಮೈತ್ರಿ ಮಾಡಿಕೊಳ್ಳಲು ವಿರೋಧಿಸುವವರ ಮಾತಿಗೆ ಬೆಲೆ ಇಲ್ಲ ಎಂದು ಹೇಳಿಕೆ ನೀಡುವ ಮೂಲಕ ದೇಶಪಾಂಡೆ ತೀಕ್ಷ್ಣವಾಗಿ ಸಿದ್ದರಾಮಯ್ಯ ಅವರಿಗೆ ಗುದ್ದು ನೀಡಿದ್ದಾರೆ.
ಜೆಡಿಎಸ್ ಮುಖಂಡರ ಮೈತ್ರಿ ಪ್ರಸ್ತಾಪವನ್ನು ಸ್ವಾಗತಿಸಿದ ದೇಶಪಾಂಡೆ, ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ದೇಶನದ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಡಿ.ಕೆ.ಶಿವಕುಮಾರ್ ಹಾಗೂ ನನ್ನ ನೇತೃತ್ರದಲ್ಲಿ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಲಾಗುವುದು. ಪಕ್ಷದ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ತಂತ್ರ ರೂಪಿಸಲಾಗುವುದು ಎಂದು ಹೇಳಿದರು.
ಜೆಡಿಎಸ್ ಜತೆಗೆ ಮೈತ್ರಿಗೆ ಮುಂದಾಗುವುದರಿಂದ ಸಿದ್ದರಾಮಯ್ಯ ಅವರಿಗೆ ಇರಸುಮುರಸು ಉಂಟಾಗುವುದು ಸಹಜ. ಆಗ ಸಿದ್ದು ಯಾವ ನಿರ್ಧಾರಕ್ಕೆ ಬರಲಿದ್ದಾರೆ ಎನ್ನುವುದು ಮುಖ್ಯ ಅಂಶವಾಗಿದೆ. ದೇಶಪಾಂಡೆ ಅವರ ಹೇಳಿಕೆಯಿಂದ ಜೆಡಿಎಸ್ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋತು ಸುಣ್ಣವಾಗಿತ್ತು. ಜತೆಗೆ ಕೆಲ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ್ದು ಜೆಡಿಎಸ್ ಮುಖಂಡರ ನಿದ್ದೆಗೆಡಿಸಿತ್ತು. ಈ ಹಿನ್ನೆಲೆಯಲ್ಲಿ ದೇವೇಗೌಡ ಕಾಂಗ್ರೆಸ್ ಜತೆಗೆ ಮೈತ್ರಿಗೆ ಮುಂದಾಗಿದ್ದರು. ಆದರೆ ಕಾಂಗ್ರೆಸ್ ವರಿಷ್ಠರು ದೇವೇಗೌಡರ ಪ್ರಸ್ತಾಪಕ್ಕೆ ಸೊಪ್ಪು ಹಾಕಿರಲಿಲ್ಲ. ಕೆಪಿಸಿಸಿ ಅಧ್ಯಕ್ಷರಾಗಿರುವ ದೇಶಪಾಂಡೆ ಮೈತ್ರಿಗೆ ಜೀವ ನೀಡಿದ್ದು ಮುಂದಿನ ದಿನಗಳಲ್ಲಿ ಮೈತ್ರಿಯಿಂದ ಲಾಭವಾಗಲಿದೆ ಎನ್ನುವುದು ಕುತೂಹಲ ಪ್ರಶ್ನೆಯಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಕೆಪಿಸಿಸಿ ಅಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ ನೇಮಕ