ದೊಡ್ಡಬಳ್ಳಾಪುರದಲ್ಲಿ ಅ. 6ರಂದು ಕಾಂಗ್ರೆಸ್ ಸಮಾವೇಶ
ಬೆಂಗಳೂರು, ಸೆ. 29 : ಕೊನೆಗೂ ರಾಜ್ಯ ಕಾಂಗ್ರೆಸ್ ನಾಯಕರು ಎಚ್ಚತ್ತುಕೊಂಡಿರುವ ಲಕ್ಷಣಗಳು ಗೋಚರಿಸತೊಡಗಿವೆ. ಉಪಚುನಾವಣೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 6 ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾರ್ವಜನಿಕರ ಸಮಾರಂಭವನ್ನು ಏರ್ಪಡಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.
ಇಂದು ನಡೆದ ಕಾಂಗ್ರೆಸ್ ಪಕ್ಷದ ನಾಯಕರ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು. ಸರ್ಕಾರದ ವೈಫಲ್ಯ ಖಂಡಿಸುವುದರ ಜತೆಗೆ ಉಪಚುನಾವಣೆ ಗಮನದಲ್ಲಿರಿಸಿಕೊಂಡು ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ಅವರು ಹೇಳಿದರು. ಅಲ್ಲದೇ ಈ ಸಮಾವೇಶ ಪಕ್ಷದ ನೂತನ ಕಾರ್ಯಾಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರ ಶಕ್ತಿ ಪ್ರದರ್ಶನವೂ ಎಂದು ಬಿಂಬಸಲಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಆರ್.ಎಲ್. ಜಾಲಪ್ಪ ಅವರ ಪುತ್ರ ನರಸಿಂಹಸ್ವಾಮಿ ಇತ್ತೀಚೆಗೆ ತಮ್ಮ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ದೊಡ್ಡಬಳ್ಳಾಪುರದಿಂದ ತನ್ನ ಚುನಾವಣೆ ರಣಕಹಳೆ ಊದಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ.
ಅ. 4 ರಂದು ಪ್ರತಿಭಟನೆ
ಅಕ್ಟೋಬರ್ 4 ರಂದು ಕೆಪಿಸಿಸಿ ನೂತನ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹಾಗೂ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಕಚೇರಿಯಿಂದ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖರ್ಗೆ ವಿವರಿಸಿದರು.
ಸಿದ್ದು ಗೈರು
ಕೆಪಿಸಿಸಿ ಅಧ್ಯಕ್ಷ ಪದವಿ ಪ್ರಬಲ ಆಕಾಂಕ್ಷಿಯಾಗಿದ್ದ ಸಿದ್ದರಾಮಯ್ಯ ಇಂದು ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಗೈರು ಹಾಜರಾಗಿರುವುದು ಎದ್ದು ಕಂಡಿತು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಾಟ್ ಫೆವರಿಟ್ ಎಂದೆಣಿಸಲಾಗಿದ್ದ ಸಿದ್ಧರಾಮಯ್ಯಗೆ ಹೈಕಮಾಂಡ್ ಕೈಕೊಟ್ಟಿರುವುದು ಸಿದ್ದು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದನ್ನು ಭಾನುವಾರ ಅವರೇ ಬಹಿರಂಗಪಡಿಸಿದ್ದಾರೆ. ಅಲ್ಲದೆ ಅಹಿಂದ ಕಾರ್ಯಕ್ರಮಗಳಿಗೆ ತೆರಳುವುದಾಗಿ ಸಹ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಗೈರು ಅವರ ನಡೆಯ ಕನ್ನಡಿ ಎನ್ನುವುದು ಸ್ಫಷ್ಟವಾಗಿತ್ತು.
(ದಟ್ಸ್ ಕನ್ನಡ ವಾರ್ತೆ)
ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ನಾಚಿಕೆಗೇಡು












Click it and Unblock the Notifications