ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ನೋಟಿಸ್
ಬೆಂಗಳೂರು, ಸೆ. 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದರಿಂದ ಹೈಕೋರ್ಟ್ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಇಂದು ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮೂರು ತಿಂಗಳೊಳಗೆ ಚುನಾವಣೆ ನಡೆಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಹೈಕೋರ್ಟ್ ಚುನಾವಣೆ ಆಯೋಗ ಹಾಗೂ ಸರ್ಕಾರಕ್ಕೆ ಜು. 2 ರಂದು ಸ್ಪಷ್ಟ ಆದೇಶ ನೀಡಿತ್ತು. ನ್ಯಾಯಾಲಯ ನೀಡಿದ್ದ ಮೂರು ತಿಂಗಳ ಗಡುವು ಮುಗಿಯುತ್ತ ಬಂದಿದ್ದರೂ ಸರ್ಕಾರ ಚುನಾವಣೆ ಪ್ರಕ್ರಿಯೆ ಆರಂಭಿಸದಿರುವ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಪಿ.ಎಸ್. ರಮೇಶ್ ಮತ್ತೆ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
ಈ ಮಧ್ಯೆ, ಬಿಬಿಎಂಪಿ ಚುನಾವಣೆ ಕುರಿತು ನ್ಯಾಯಾಲಯ ನೀಡಿದ್ದ ಮೂರು ತಿಂಗಳ ಗಡುವನ್ನು ಪ್ರಶ್ನಿಸಿದ್ದ ಸರ್ಕಾರ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಅರ್ಜಿಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ನೂತನ ಮತದಾರರ ಪಟ್ಟಿ ತಯಾರಿಸಬೇಕಿರುವ ಹಿನ್ನೆಲೆಯಲ್ಲಿ 147 ದಿನಗಳ ಬೇಕಿದೆ. ಆದ್ದರಿಂದ ನ್ಯಾಯಾಲಯ ನೀಡಿರುವ ಗಡುವಿನ ಅವಧಿಯನ್ನು ವಿಸ್ತರಿಸಬೇಕು ಎಂದು ಸರ್ಕಾರ ನ್ಯಾಯಾಲಯವನ್ನು ಕೋರಿತ್ತು. ಆದರೆ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ನ್ಯಾಯಾಲಯ,ನ್ಯಾಯಾಂಗ ನಿಂದನೆಯಡಿಯಲ್ಲಿ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಹಿನ್ನೆಲೆ
ಬೆಂಗಳೂರು ಮಹಾನಗರ ಪಾಲಿಕೆಗೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಮಾಜಿ ಮೇಯರ್ ಪಿ.ಆರ್. ರಮೇಶ್ ಮತ್ತು ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಎರಡೂ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಮತ್ತು ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿದ ನಂತರ ಈ ತೀರ್ಪು ನೀಡಿತ್ತು.
(ದಟ್ಸ್ ಕನ್ನಡ ವಾರ್ತೆ)
15
ದಿನದೊಳಗೆ
ಬಿಬಿಎಂಪಿ
ಚುನಾವಣೆಗೆ
ಒತ್ತಾಯ
ಬಿಬಿಎಂಪಿ
ಚುನಾವಣೆಗೆ
ಹೈಕೋರ್ಟ್
ಆದೇಶ