ಮಾನನಷ್ಟ ಮೊಕದ್ದಮೆಗೆ ಭಯವಿಲ್ಲ : ಕುಮಾರಸ್ವಾಮಿ
ಬೆಂಗಳೂರು, ಸೆ. 1 : ಈಜೀಪುರ ಆರ್ಥಿಕ ದುರ್ಬಲ ವರ್ಗದವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಯೋಜನೆಯನ್ನು ಮೇವರಿಕ್ ಸಂಸ್ಥೆಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಗುತ್ತಿಗೆ ಪಡೆದಿರುವ ಸಂಸ್ಥೆಯ ಮುಖ್ಯಸ್ಥರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇಷ್ಟಾದರೂ ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ಮುಂದಾಗಿರುವುದಕ್ಕೆ ತಾವು ಹೆದರುವುದಿಲ್ಲ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮೇಲೆ ಮಾಡಿರುವ ಆರೋಪಕ್ಕೆ ಬದ್ಧನಾಗಿರುವೆ ಎಂದರು. ಸರ್ಕಾರದ ತಪ್ಪುಗಳನ್ನು ಎತ್ತಿ ಹಿಡಿಯುವುದು ಪ್ರತಿಪಕ್ಷಗಳ ಕೆಲಸ, ಅದನ್ನು ಕಳೆದ ಮೂರು ತಿಂಗಳಿಂದ ಜೆಡಿಎಸ್ ಸಮರ್ಥವಾಗಿ ಮಾಡುತ್ತಿದೆ. ಇದರಿಂದ ಸರ್ಕಾರ ಇಕ್ಕಟ್ಟಿಗೆ ಸಿಲುಕತೊಡಗಿದ್ದರಿಂದ ಪ್ರತಿಪಕ್ಷಗಳ ನಾಯಕರ ಬಾಯಿ ಮುಚ್ಚಿಸಲು ಇಲ್ಲದ ಪ್ರಯತ್ನ ನಡೆಸಿರುವುದಕ್ಕೆ ತಾವು ಬಗ್ಗುವುದಿಲ್ಲ ಎಂದು ಪ್ರತ್ಯುತ್ತರ ನೀಡಿದರು. ಈಜೀಪುರ ವಸತಿ ಸಮುಚ್ಛಯ ಹಾಗೂ ಸರ್ಕಾರ ಇತ್ತೀಚೆಗೆ ತೆಗೆದುಕೊಂಡ ಕೆಲ ನಿರ್ಧಾರಗಳು ಕುರಿತು ಚರ್ಚಿಸಲು ಕೂಡಲೇ ಅಧಿವೇಶನವನ್ನು ಕರೆಯಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ ಭಾಷಣ ವಿವೇಚನಾ ರಹಿತವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ಸಿದ್ಧಗಂಗಾ ಶ್ರೀಗಳ ಸಮ್ಮುಖದಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದಾರೆ ಎನ್ನುವ ಕನಿಷ್ಠ ಪ್ರಜ್ಞೆಯೂ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಪಕ್ಷದವರನ್ನು ತೀವ್ರ ಕೀಳಾಗಿ ಕಂಡಿರುವುದು ಖಂಡನಾರ್ಹ. ಯಡಿಯೂರಪ್ಪ ಬುದ್ಧಿ ಭ್ರಮಣೆಯಾದವರಂತೆ ಅವರು ವರ್ತಿಸಿದ್ದಾರೆ ಎಂದು ಕಿಡಿಕಾರಿದರು.
ಈಜೀಪುರ ವಸತಿ ಸಮುಚ್ಛಯ ಪ್ರಕರಣವನ್ನು ಲೋಕಾಯುಕ್ತಕ್ಕೆ ನೀಡಿರುವುದು ಸ್ವಾಗತಾರ್ಹ. ಆದರೆ ಲೋಕಾಯುಕ್ತಕ್ಕೆ ಅಧಿಕಾರ ನೀಡದೆ ತನಿಖೆಗೆ ವಹಿಸಿದರೆ ಸತ್ಯ ಹೊರಬರಲು ಸಾಧ್ಯವೇ ಎಂದು ಸಂಶಯ ವ್ಯಕ್ತಪಡಿಸಿದ ಅವರು, ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಿ ತನಿಖೆಗೆ ಆದೇಶಿಸಿ ಎಂದು ಅವರು ತಾಕೀತು ಮಾಡಿದರು.
(ದಟ್ಸ್ ಕನ್ನಡ ವಾರ್ತೆ)
ಕುಮಾರಸ್ವಾಮಿ ವಿರುದ್ಧ ಈಶ್ವರಪ್ಪ ಮಾನನಷ್ಟ ವ್ಯಾಜ್ಯ
ದಸರಾಗೆ ಸಿದ್ಧಗಂಗೆ ಶ್ರಿಗಳಿಂದ ವಿದ್ಯುಕ್ತ ಚಾಲನೆ












Click it and Unblock the Notifications