371ನೇ ವಿಧಿ ತಿದ್ದುಪಡಿಗೆ ಕನ್ನಡ ಸೇನೆ ಆಗ್ರಹ
ಬೀದರ್, ಅ.8: ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತರಬೇಕು ಎಂದು ಕನ್ನಡ ಸೇನೆಯ ಬೀದರ್ ಜಿಲ್ಲಾ ಘಟಕ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತು.
ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡ ಕನ್ನಡ ಸೇನೆ ಕಾರ್ಯಕರ್ತರು ನಂತರ ಉಪ ಜಿಲ್ಲಾಯುಕ್ತರ ಕಚೇರಿಗೆ ಮೆರೆವಣಿಗೆ ಮೂಲಕ ತೆರಳಿ ಮನವಿಪತ್ರ ಸಲ್ಲಿಸಿದರು. ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕರ್ತರು 371ನೇ ವಿಧಿ ತಿದ್ದುಪಡಿಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಕೇಂದ್ರದ ಕ್ರಮವನ್ನು ಖಂಡಿಸಿದರು. ಹಾಗೆಯೇ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡುವಲ್ಲೂ ಕೇಂದ್ರಸರ್ಕಾರ ತಡ ಮಾಡುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ದಶಕ ಕಳೆಯುತ್ತಾ ಬಂದಿದ್ದರು ಬೀದರ್-ಗುಲ್ಬರ್ಗ ರೈಲ್ವೆ ಮಾರ್ಗದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಗಮನ ಹರಿಸಿ, ಶೀಘ್ರ ಸಮಸ್ಯೆಯನ್ನು ಪರಿಹಾರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾದ ಮನವಿಪತ್ರದಲ್ಲಿ ಕೋರಲಾಯಿತು. ಪ್ರತಿಭಟನೆಯ ನೇತೃತ್ವವನ್ನು ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಧನರಾಜ್ ಕರಣ್ ಜಿ ವಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications