ದೇಶಪಾಂಡೆಯವರನ್ನು ಪರೀಕ್ಷೆಗೆ ಒಳಪಡಿಸಿ
ಬೆಂಗಳೂರು, ಅ. 14 : 'ನನ್ನ ತಂದೆ ಶಾಸಕ ವಸಂತ ಅಸ್ನೋಟಿಕರ್ ಹಾಗೂ ಭಟ್ಕಳದ ಮಾಜಿ ಶಾಸಕ ಚಿತ್ತರಂಜನ್ ಹತ್ಯೆಯ ನಂತರ ನಡೆಸಿದ ಸಿಬಿಐ ತನಿಖೆಯಿಂದ ತಿಳಿದು ಬಂದಿರುವ ರಾಜಕಾರಣಿಗಳನ್ನು ವಿಧಿವಿಜ್ಞಾನ ಪ್ರಯೋಗಕ್ಕೆ ಒಳಪಡಿಸಬೇಕು' ಎಂದು ಮೀನುಗಾರಿಕೆ ಸಚಿವ ಆನಂದ ಅಸ್ನೋಟಿಕರ್ ಸರ್ಕಾರವನ್ನು ಒತ್ತಾಯಿಸುವ ಮೂಲಕ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರಿಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸತ್ಯಾಸತ್ಯತೆ ಹೊರಬರಬೇಕೆಂದರೆ ರಾಜ್ಯ ಪ್ರಮುಖ ರಾಜಕಾರಣಿಗಳನ್ನು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ ಎಂದರು. ನಾನು ಅಮಾಯಕ, ನನ್ನ ಮೇಲೆ ಮಾಡಲಾಗಿರುವ ಆರೋಪ ರಾಜಕೀಯ ದುರದ್ದೇಶದಿಂದ ಕೂಡಿದೆ. ನನ್ನ ಏಳಿಗೆ ಸಹಿಸದ ಕೆಲವರು ವಿನಾಕಾರಣ ಗೂಬೆ ಕೂರಿಸುವ ಮೂಲಕ ರಾಜಕೀಯವಾಗಿ ನನ್ನನ್ನು ಮುಗಿಸುವ ಪ್ರಯತ್ನ ನಡೆಸುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ನಾನು ಕಾಂಗ್ರೆಸ್ ನಲ್ಲಿದ್ದಾಗ ಎಲ್ಲವೂ ಸರಿಯಿತ್ತು. ಆದರೆ ಕಾಂಗ್ರೆಸ್ ತೊರೆದ ಬಿಜೆಪಿ ಸೇರಿದ ನಂತರ ಅದು ಬೆಳಕಿಗೆ ಬರಲು ಕಾರಣವೇನು ಎಂದು ಅವರು ಪ್ರಶ್ನಿಸಿದರು. ಕಳೆದ ವಿಧಾನ ಸಭೆ ಚುನಾವಣೆಗೆ ಸಲ್ಲಿಸಿದ ಪ್ರಮಾಣ ಪತ್ರಗಳು ಪಾರದರ್ಶಕವಾಗಿವೆ. ನನ್ನಿಂದ ಯಾವ ಅಪರಾಧವೂ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ದಿಲೀಪ ನಾಯಕ್ ಹತ್ಯೆ ಪ್ರಕರಣದಲ್ಲಿ ನನ್ನ ತಾಯಿ ಶುಭಲತಾ ಅಸ್ನೋಟಿಕರ್ ಹಾಗೂ ನಾನು ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಿದ್ದಾರೆ. ದೇಶಪಾಂಡೆ ಅವರು ಹಿರಿಯ ರಾಜಕಾರಣಿಗಳು, ಇನ್ನೊಬ್ಬರ ತೇಜೋವಧೆ ಮಾಡುವಂತ ಆರೋಪ ಮಾಡುವಾಗ ಎಚ್ಚರ ತಪ್ಪಬಾರದಿತ್ತು ಎಂದು ಹರಿಹಾಯ್ದಿದ್ದಾರೆ.
ನನ್ನ ರಾಜಕೀಯ ಬೆಳವಣಿಗೆಯನ್ನು ಕಾಂಗ್ರೆಸ್ ಕೆಲ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಅನೇಕ ಜನ ನನ್ನನ್ನು ಉಪಚುನಾವಣೆಯಲ್ಲಿ ಸೋಲಿಸಲು ಭಾರಿ ಹರಸಾಹಸ ನಡೆಸುತ್ತಿದ್ದಾರೆ. ಆದರೆ ಒಂದು ಮಾತು ಸತ್ಯ, ಬರಲಿರುವ ಉಪಚುನಾವಣೆಯಲ್ಲಿ ನನ್ನ ಕ್ಷೇತ್ರವೂ ಸೇರಿ ಏಳು ಕ್ಷೇತ್ರಗಳಲ್ಲಿ ಅತ್ಯಧಿಕ ಮತಗಳನ್ನು ಗಳಿಸುವ ಮೂಲಕ ಗೆಲುವು ಸಾಧಿಸುವುದರಲ್ಲಿ ಸಂಶಯವಿಲ್ಲ ಎಂದು ಆನಂದ ಅಸ್ನೋಟಿಕರ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ
ಸಚಿವ ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಕೇಸ್












Click it and Unblock the Notifications