ರಾಜ್ ಠಾಕ್ರೆ ಬಂಧನ, ಮಹಾರಾಷ್ಟ್ರ ಉದ್ವಿಗ್ನ
ಮುಂಬೈ, ಅ. 21 : ರೈಲ್ವೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡುತ್ತಿಲ್ಲ ಎಂದು ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಮಂಗಳವಾರ ಬೆಳಗಿನ ಜಾವ ರತ್ನಗಿರಿಯಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ರಾಜ್ ಠಾಕ್ರೆ ಬಂಧನವನ್ನು ಖಂಡಿಸಿ ಎಂಎನ್ಎಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದ ಘಟನೆ ಜರುಗಿದೆ.
ಕಳೆದ ಭಾನುವಾರ ಸ್ಥಳೀಯರಿಗೆ ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರಾಜ್ ಠಾಕ್ರೆ ಹಾಗೂ ಅವರ ಬೆಂಬಲಲಿಗರು ರೈಲ್ವೆ ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದರಿಂದ ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು. ದಾಳಿಗೆ ಸಂಬಂಧಿಸಿದಂತೆ ಖಾರವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ರಾಜ್ ಠಾಕ್ರೆ ಅವರನ್ನು ಬಂಧಿಸಲು ಸರ್ಕಾರ ಮುಂದಾಗಿದೆ. ಬುಧವಾರ ನಗರದ ಬಾಂದ್ರಾ ನ್ಯಾಯಾಲಯಕ್ಕೆ ರಾಜ್ ಠಾಕ್ರೆ ಅವರನ್ನು ಹಾಜರುಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ರಾಜ್ ಠಾಕ್ರೆ ಅವರ ದಾಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್ ಮುಖ್ ಎಂಎನ್ಎಸ್ ಗೂಂಡಾಗಿರಿಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ಜತೆಗೆ ಕೇಂದ್ರ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರು ರಾಜ್ ಠಾಕ್ರೆ ಮಾನಸಿಕ ಅಸ್ವಸ್ಥನಾಗಿದ್ದಾನೆ. ಆತನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಅಗತ್ಯ ಎಂದು ಕಿಡಿಕಾರಿದ್ದರು.
ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ರಾಜ್ ಸೋಮವಾರ ಸರ್ಕಾರಕ್ಕೆ ಸವಾಲ್ ಹಾಕಿದ್ದರು. ನನ್ನನ್ನು ಬಂಧಿಸಿದಲ್ಲಿ ಇಡೀ ಮಹಾರಾಷ್ಟ್ರ ಹೊತ್ತಿ ಉರಿಯಲಿದೆ ಎಂದು ಹೇಳಿಕೆ ನೀಡಿದ್ದರು. ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ರಾಜ್ ಠಾಕ್ರೆ ಅವರನ್ನು ಬಂಧಿಸಿದ್ದಾರೆ. ರಾಜ್ ಠಾಕ್ರೆ ಬಂಧನದ ವಿಷಯ ತಿಳಿಯುತ್ತಿದ್ದಂತೆಯೇ ಮಹಾರಾಷ್ಟ್ರ ಉದ್ವಿಗ್ನ ವಾತಾವರಣ ನಿರ್ಮಾಣ ಉಂಟಾಗಿದೆ. ಎಂಎನ್ಎಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ಸುಗಳಿಗೆ ಕಲ್ಲು ತೂರಲಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದೇ ವೇಳೆ ಮುಂಬೈನಲ್ಲಿ ಜಾರ್ಖಂಡ್ ಪೊಲೀಸರು ಠಾಕ್ರೆ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಅನ್ನು ಮಹಾರಾಷ್ಟ್ರ ಪೊಲೀಸರಿಗೆ ವರ್ಗಾಯಿಸಿದೆ. ಬಿಹಾರಿಗಳ ಬಗ್ಗೆ ಅವಹೇಳಕಾರಿ ಮಾತನ್ನಾಡಿದ್ದಾರೆ ಎಂದು ಜೆಮಶೆಡ್ ಪುರ ನ್ಯಾಯಾಲಯ ಅವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ನವೆಂಬರ್ 17ರೊಳಗೆ ರಾಜ್ ಠಾಕ್ರೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ನ್ಯಾಯಾಲಯ ಸೂಚನೆ ನೀಡಿದೆ.
(ದಟ್ಸ್ ಕನ್ನಡ ವಾರ್ತೆ)