ಕರವೇ ಭಜರಂಗಿಗಳ ನಡುವೆ ಮಾರಾಮಾರಿ
ಕಿತ್ತೂರು, ಅ. 23 : ಕಿತ್ತೂರು ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಭಜರಂಗದಳ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರಿಂದ ನಾಲ್ವರಿಗೆ ಗಾಯವಾಗಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಇಂಥ ಕಹಿ ಘಟನೆಯೊಂದು ನಡೆದಿರುವುದು ಕಾರ್ಯಕ್ರಮಕ್ಕೆ ಕಪ್ಪುಚುಕ್ಕೆಯಂತಾಗಿದೆ.
ಕಿತ್ತೂರು ಉತ್ಸವದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಇತಿಹಾಸವನ್ನು ಪ್ರತಿಬಿಂಬಿಸುವ ಕಲಾ ಪ್ರಕಾರಗಳ ಮೆರವಣಿಗೆ ಸಾಗುತ್ತಿತ್ತು. ಈ ಸಂದರ್ಭದಲ್ಲಿ ಪಾನಮತ್ತರಾಗಿದ್ದರು ಎನ್ನಲಾದ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಭಜರಂಗದಳ ಸಂಘಟನೆಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಮಾತಿನ ಚಕಮಕಿ ನಡೆದು ಮಾರಾಮಾರಿ ಆಗಿದ್ದರಿಂದ ನಾಲ್ಕು ಮಂದಿಗೆ ಗಾಯವಾಗಿರುವ ಘಟನೆ ನಡೆದಿದೆ.
ಗಾಯಗೊಂಡವರನ್ನು ಕಿತ್ತೂರು ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಗಲಾಟೆ ನಿರತರನ್ನು ಚೆದುರಿಸಿದ್ದಾರೆ. ಗಲಾಟೆಯಿಂದಾಗಿ ಮೆರವಣಿಗೆಗೆ ಅರ್ಥ ಗಂಟೆ ವ್ಯತ್ಯಯ ಉಂಟಾಗಿತ್ತು. ಕೆಲ ಕಾಲ ಉದ್ವಿಗ್ನ ಪರಿಸ್ಥಿತಿಯೂ ತಲೆದೋರಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಸಂಪೂರ್ಣ ಹತೋಟಿಗೆ ತೆಗೆದುಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
'ಕಿತ್ತೂರು ಉತ್ಸವ'ಕ್ಕೆ 1 ಕೋಟಿ ರು. ಅನುದಾನ