ರಾಜ್ಯೋತ್ಸವ ಪ್ರಶಸ್ತಿ 80 ಮಂದಿಗೆ ಸೀಮಿತ: ಸಿಎಂ
ಬೆಂಗಳೂರು, ಅ. 28 : 2008ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತರ ಪಟ್ಟಿಯನ್ನು ಅ. 30 ರಂದು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಗೊಂದಲವಿಲ್ಲದೇ ಪಟ್ಟಿಯನ್ನು ತಯಾರಿಸಲಾಗಿದ್ದು, ಬಿಡುಗಡೆ ಹಂತದಲ್ಲಿದೆ ಎಂದರು. ಕಳೆದ ಸಲ ರಾಜ್ಯೋತ್ಸವ ಪ್ರಶಸ್ತಿಯನ್ನು 50 ಮಂದಿಗೆ ಮಾತ್ರ ನೀಡಲು ಸರ್ಕಾರ ನಿರ್ಧರಿಸಿತ್ತು. ಆದರೆ, ಈ ಸಲ ಆದರ ಸಂಖ್ಯೆಯನ್ನು 80ಕ್ಕೆ ಏರಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಪ್ರಶಸ್ತಿಗೆ ಒಟ್ಟು 3 ಸಾವಿರ ಅರ್ಜಿಗಳು ಬಂದಿದ್ದವು. ಯಾವುದೇ ಒತ್ತಡಕ್ಕೆ ಒಳಗಾಗದೆ ಅರ್ಹ ಎನಿಸಿದ 80 ಗಣ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಬಹುತೇಕ ಕೊನೆಗೊಂಡಿದೆ. ಅ. 30 ರಂದು ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ನ. 1ರಂದು ಸಂಜೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಭವ್ಯವಾದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಲಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸರ್ವಪಕ್ಷಗಳೊಂದಿಗೆ ದೆಹಲಿಗೆ ತೆರಳಲು ಅಪಸ್ವರ ಎತ್ತಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನವೂಲಿಸಿ ದೆಹಲಿಗೆ ತೆರಳುವುದಾಗಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಸಾಧನೆಯೇ ಅರ್ಹತೆ