ಮೈಸೂರು ಎಸ್ ಎಫ್ ಎಂ ಕಚೇರಿ ಮೇಲೆ ಕರವೇ ದಾಳಿ
ಮೈಸೂರು, ನ. 1 : ಕನ್ನಡ ರಾಜ್ಯೋತ್ಸವದ ದಿನದಂದು ಹಿಂದಿ ಚಿತ್ರಗೀತೆಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರಿನ ಎಸ್ಎಫ್ ಎಂ ರೇಡಿಯೋ ಕೇಂದ್ರದ ಮೇಲೆ ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ನವೆಂಬರ್ 1 ಕನ್ನಡ ರಾಜ್ಯೋತ್ಸವದ ಜೊತೆಗೆ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿರುವ ಸಂಭ್ರಮದ ದಿನ, ಇಂತಹ ಅಪರೂದ ಕ್ಷಣದಲ್ಲಿ ಹಿಂದಿ ಹಾಡುಗಳನ್ನು ಪ್ರಸಾರ ಮಾಡಿ ಕನ್ನಡ ಅವಮಾನ ಮಾಡುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಘಟಕದ ಕಾರ್ಯಕರ್ತರು 93.5 ಎಸ್ಎಫ್ಎಂ ಕೇಂದ್ರದ ಮೇಲೆ ದಾಳಿ ನಡೆಸಿ ಲಕ್ಷಾಂತರ ರು. ಬೆಲೆ ಬಾಳುವ ಪಿಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎಫ್ಎಂ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮಹಿಳಾ ಸಿಬ್ಬಂದಿಯ ಮೇಲೂ ದಾಳಿ ನಡೆದಿದ್ದು, ಪ್ರಾಣ ಭಯದಿಂದ ಅವರು ಟಾಯ್ಲೆಟಿನಲ್ಲಿ ಬಚ್ಚಿಕೊಂಡಿದ್ದರು.
ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಘಟಕದ ಅಧ್ಯಕ್ಷ ಮೋಹನ್ ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಕರವೇ ದಾಳಿಯ ಮುನ್ಸೂಚನೆ ಪೊಲೀಸರಿಗೆ ತಿಳಿದಿತ್ತು. ಆದರೆ, ಎಸ್ಎಂಎಫ್ ಕೇಂದ್ರದ ಮೇಲೆ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಇದ್ದರೂ ಕೂಡಾ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ಅನುಭವಿಸಬೇಕಾಯಿತು. ಪೊಲೀಸರೇ ಎಫ್ಎಂ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಯನ್ನು ರಕ್ಷಿಸುವಲ್ಲಿ ವಿಫಲರಾದರು ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)