ಸರ್ವ ಪಕ್ಷಗಳ ಸಭೆ, ಸಂಘಟಿತ ಹೋರಾಟಕ್ಕೆ ಪಣ
ಬೆಂಗಳೂರು, ಡಿ. 1 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. ಮುಂಬೈ ಭಯೋತ್ಪಾದನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮುಖ್ಯವಾಗಿ ಉಗ್ರರ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ. ರಾಜ್ಯ ಪೊಲೀಸರಿಗೆ ಕಮಾಂಡೋ ತರಬೇತಿ ನೀಡುವುದು. ಬೇಹುಗಾರಿಕೆ ಇಲಾಖೆ ಬಲವರ್ಧನೆಗೆ ಕ್ರಮ. ಪೊಲೀಸ್ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ಕುರಿತು ಚರ್ಚಿಸಲಾಯಿತು. ಕಾಂಗ್ರೆಸ್ ಪಕ್ಷದ ನಾಯಕರು, ಮುಖ್ಯವಾಗಿ ರಾಜ್ಯದ ಎಲ್ಲರಿಗೂ ಗುರುತಿನ ಚೀಟಿ ವಿತರಿಸುವ ಕೆಲಸ ನೀಡಲು ಸರ್ಕಾರ ಮುಂದಾಗಬೇಕು ಎಂದು ಸಲಹೆ ನೀಡಿದರು. ಭಯೋತ್ಪಾದನೆ ನಿಗ್ರಹಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದರು.
ಈ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಬೇಕಿರುವ ಸಮಗ್ರ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಬರೆಯುವ ಮೂಲಕ ಶೀಘ್ರದಲ್ಲಿ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಭಯೋತ್ಪಾದನಾ ದಾಳಿಗೆ ಈಡಾದ ರಾಜ್ಯಗಳ ಸಿಎಂಗಳ ಸಭೆಯನ್ನು ನಡೆಸಬೇಕು. ಫೆಡರಲ್ ತನಿಖಾ ಏಜನ್ಸಿ ಶೀಘ್ರ ಆರಂಭಿಸಬೇಕು. ಪೋಟಾ ಮಾದರಿಯ ಕಾಯ್ದೆಯನ್ನು ಶೀಘ್ರದಲ್ಲಿ ತರಬೇಕು. ಭಯೋತ್ಪಾದನೆ ನಿಗ್ರಹ ನಿಟ್ಟಿನಲ್ಲಿ ಎಲ್ಲ ರಾಜ್ಯಗಳ ಸಿಎಂಗಳ ಸಭೆ ಕರೆಯಬೇಕು. ಕೇಂದ್ರ ಮತ್ತು ರಾಜ್ಯ ಬೇಹುಗಾರಿಕೆ ಇಲಾಖೆಗಳು ಏಕರೂಪತೆಯನ್ನು ಕಾರ್ಯನಿರ್ವಹಿಸಬೇಕು. ರಾಜ್ಯಕ್ಕೆ ಎನ್ ಎಸ್ ಜಿ ಘಟಕ ಸ್ಫಾಪನೆ. ಭಯೋತ್ಪಾದನೆಗೆ ಸಂಘಟಿತ ಹೋರಾಟಕ್ಕೆ ಸಿಎಂ ಮನವಿ ಮಾಡಿಕೊಂಡರು.
ಸಭೆಯಲ್ಲಿ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಂಸದ ಅನಂತಕುಮಾರ್, ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಸರ್ಕಾರದ ಎಲ್ಲ ಸಚಿವರು, ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ, ಪೊಲೀಸ್ ಮಹಾನಿರ್ದೇಶಕ ಶ್ರೀಕುಮಾರ್, ರಾಜ್ಯದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications