ಆರ್ಥಿಕಸ್ಥಿತಿ ಕುರಿತು ಶ್ವೇತಪತ್ರಕ್ಕೆ ಉಗ್ರಪ್ಪ ಆಗ್ರಹ
ಬೆಂಗಳೂರು, ಡಿ. 4 : ಯಡಿಯೂರಪ್ಪ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದು ಐದು ತಿಂಗಳು ಕಳೆದಿಲ್ಲ ಆಗಲೇ ರಾಜ್ಯ ಖಜಾನೆ ಖಾಲಿಯಾಗಿ ದಿವಾಳಿ ಸ್ಥಿತಿ ಬಂದು ತಲುಪಿದೆ. ಆದ್ದರಿಂದ ಕೂಡಲೇ ಈ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ವಿಧಾನ ಪರಿಷತ್ ವಿರೋಧಿ ಪಕ್ಷದ ನಾಯಕ ವಿಎಸ್ ಉಗ್ರಪ್ಪ ಸರ್ಕಾರವನ್ನು ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಸರ್ಕಾರದ ದುರಾಡಳಿದಿಂದ ಆರ್ಥಿಕ ಸ್ಥಿತಿ ಪಾತಾಳ ಕಂಡಿದೆ. ನಾನು ಅಧಿಕಾರ ಸ್ವೀಕರಿಸಿದಾಗ ರಾಜ್ಯ ಖಜಾನೆ ತುಂಬಿತ್ತು. ಇದೀಗ ಬರಿದಾಗಿದೆ ಎಂದು ಸ್ವತ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಇದಕ್ಕಿಂತ ಸಾಕ್ಷಿ ಮತ್ತೇನು ಬೇಕು? ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತ ಪತ್ರ ಶೀಘ್ರದಲ್ಲಿ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.
ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಯವರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಆದರೆ ಚುನಾವಣೆ ಮುಂದಿರುವಾಗ ಮಠಮಾನ್ಯಗಳಿಗೆ ಬೇಕಾಬಿಟ್ಟಿಯಾಗಿ ಲಕ್ಷಗಟ್ಟಲೇ ನೀಡುವುದು ಏಕೆ ಎಂದು ಅವರು ಪ್ರಶ್ನಿಸಿದರು. ಸರ್ಕಾರ ಈ ಮನಸ್ಥಿತಿಯಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿವೇಶನ ಕರೆಯಬೇಕು ಎಂದು ಉಗ್ರಪ್ಪ ಸರ್ಕಾರವನ್ನು ಒತ್ತಾಯಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications