ಜೆಡಿಎಸ್ ಸಮಾವೇಶ: ಬಿಎಂಟಿಸಿಗೆ ಛೀಮಾರಿ
ಬೆಂಗಳೂರು, ಡಿ. 5 : ರಾಜಕೀಯ ಸಮಾವೇಶಕ್ಕೆ ಸರ್ಕಾರಿ ಬಸ್ ಗಳನ್ನು ನೀಡಿರುವ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಹೈಕೋರ್ಟ್ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಗಳಿಗೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ.
ಜನಾಗ್ರಹ ವೇದಿಕೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ರಾಜಕೀಯ ಸಮಾವೇಶಗಳಿಗೆ ಬಸ್ ಗಳನ್ನು ನೀಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದೆ.
ಸಾರ್ವಜನಿಕರ ಸಮಸ್ಯೆಯಾಗುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕೆ ಸರ್ಕಾರ ಹೇಗೆ ಅವಕಾಶ ನೀಡಿತು. ಬೆಂಗಳೂರು ಪೊಲೀಸ್ ಕಮಿಷನರ್ ಯಾವ ಆಧಾರದ ಮೇಲೆ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಿದರು ಎಂದು ಇದೇ ಸಂದರ್ಭದಲ್ಲಿ ನ್ಯಾಯಾಲಯ ಪ್ರಶ್ನಿಸಿದೆ.
ಕಳೆದ ತಿಂಗಳು 16 ರಂದು ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸುವ ಸಲುವಾಗಿ ಜೆಡಿಎಸ್ ಪಕ್ಷ ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶಕ್ಕೆ ಸರ್ಕಾರಿ ಬಸ್ ಗಳನ್ನು ನೀಡಲಾಗಿತ್ತು.
ರಾಜ್ಯ ವಿವಿಧ ಕಡೆಯಿಂದ ಲಕ್ಷಾಂತರ ಮಂದಿ ಬೆಂಗಳೂರಿಗೆ ಬಂದಿದ್ದರು. ವಾಹನ ದಟ್ಟನೆ ಹೆಚ್ಚಾಗಿದ್ದರಿಂದ ನಗರದ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಕೆಲವಡೆ ಆರು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿ ಬೆಂಗಳೂರಿನ ಜನ ಯಮಯಾತನೆ ಅನುಭವಿಸಿದ್ದರು. ಸರ್ಕಾರಿ ಬಸ್ ಗಳನ್ನು ರಾಜಕೀಯ ಕಾರ್ಯಕ್ರಮಗಳಿಗೆ ನೀಡುವುದು ಸರಿಯಲ್ಲ ಎಂದು ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications