ಗೌಡ್ರವಿರುದ್ಧ ಕೇಸ್ ಹಾಕಿದ್ರೆ ಹುಷಾರ್:ಪೂಜಾರಿ
ಹುಬ್ಬಳ್ಳಿ, ಡಿ. 23 : ದೇವೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೀವನ ಚರಿತ್ರೆಯನ್ನೇ ಬಹಿರಂಗಗೊಳಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಯವರು ಈ ವಿಷಯದಲ್ಲಿ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ಕಿವಿ ಮಾತು ಹೇಳಿದ್ದಾರೆ. ನೈಸ್ ಕಂಪನಿಯೊಂದಿಗೆ ಜತೆಗೂಡಿ ಮುಖ್ಯಮಂತ್ರಿ ಯಡಿಯೂರಪ್ಪ ಭಾರಿ ಅವ್ಯವಹಾರ ಎಸಗಿದ್ದಾರೆ. ಸುಮಾರು 30 ಸಾವಿರ ಕೋಟಿ ರುಪಾಯಿಗಳಷ್ಟು ಹಣವನ್ನು ಲಪಟಾಸಿಯಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಆರೋಪಿಸಿದ್ದರು. ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಗೌಡರ ವಿರುದ್ಧ ವಾಗ್ಧಾಳಿ ನಡೆಸಿದ್ದರು. ಆಧಾರವಿಲ್ಲದ ಆರೋಪ ಮಾಡಿರುವ ಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ನಾಲ್ಕು ಸಲ ಯಡಿಯೂರಪ್ಪ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು.
ಇಂದು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ, ದೇವೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದು ಬೇಡ. ನೈಸ್ ಅವ್ಯವಹಾರ ಲೋಕಾಯುಕ್ತ ತನಿಖೆಗೆ ವಹಿಸಿ ಎಂದು ಹೇಳಿದ್ದಾರೆ. ದೇವೇಗೌಡರು ಮಾಡಿರುವ ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ತನಿಖೆಯಿಂದ ತಿಳಿದು ಬಂದಲ್ಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ ಎಂದು ಪೂಜಾರಿ ಯಡಿಯೂರಪ್ಪ ಅವರಿಗೆ ಉಚಿತ ಸಲಹೆ ನೀಡಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ವಿರುದ್ಧ ಸುಳ್ಳು ಆಪಾದನೆ ಮಾಡಲಾಗಿದೆ. ಲೋಕಾಯುಕ್ತರು ನೀಡಿರುವ ವರದಿಯನ್ನು ಇನ್ನೊಮ್ಮೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಪೂಜಾರಿ ಒತ್ತಾಯಿಸಿದ್ದಾರೆ.
(ದಟ್ಸ್
ಕನ್ನಡ
ವಾರ್ತೆ)
ಗೌಡ್ರ
ವಿರುದ್ಧ
ಕ್ರಿಮಿನಲ್
ಕೇಸ್
ಹಾಕುವೆ:
ಸಿಎಂ