ಸಿದ್ದು ಕೈ ಕೊಟ್ಟರೆ ನಷ್ಟವಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು, ಡಿ. 29 : ತೀವ್ರ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕೆ ತೆರಳದೆ ತಟಸ್ಥರಾಗಿ ಉಳಿದಿದ್ದಾರೆ. ಸಿದ್ದರಾಮಯ್ಯ ಅವರ ಈ ನಡೆ ಕಾಂಗ್ರೆಸ್ ಹೈಕಮಾಂಡ್ ಭಾರಿ ಅಸಮಾಧಾನ ಉಂಟುಮಾಡಿದೆ. ಹೆಚ್ಚು ಕಮ್ಮಿ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ದೂರವಿಡಲು ಕೈ ಪಾಳೆಯದಲ್ಲಿ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಚುನಾವಣಾ ಪ್ರಚಾರದಿಂದ ಸಿದ್ದರಾಮಯ್ಯ ಹೊರಗುಳಿದಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಾಗಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಪಕ್ಷದ 123 ನೇ ಜನ್ಮದಿನಾಚರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವ ನಾಯಕರ ಮೇಲೂ ನಿಂತಿಲ್ಲ. ಕಾರ್ಯಕರ್ತರಿಂದ ಪಕ್ಷವೇ ಹೊರತು, ನಾಯಕರಿಂದ ಪಕ್ಷವಲ್ಲ. ಹೀಗಾಗಿ ಸಿದ್ದರಾಮಯ್ಯ ಪ್ರಚಾರ ಕಾರ್ಯಕ್ಕೆ ಬಂದಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಯಾವ ಹಾನಿ ಆಗಿಲ್ಲ ಎಂದು ಶಿವಕುಮಾರ್ ಹೇಳಿದರು. ಸಿದ್ದರಾಮಯ್ಯ ಅವರಿಗೆ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರವಿದೆ ಎಂದು ತೀಕ್ಷ್ಣವಾಗಿ ಸಿದ್ದು ವಿರುದ್ಧ ಹರಿಹಾಯ್ದರು.
ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಸ ಕಾರ್ಯದಲ್ಲಿ ಪಾಲ್ಗೊಳ್ಳದೇ ಹೊರಗುಳಿದಿರುವ ವಿಷಯಕ್ಕೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಉಪಚುನಾವಣೆಯಲ್ಲಿ ಯಾವ ಯಾವ ನಾಯಕರು ಎಷ್ಟು ಎಷ್ಟು ಕೆಲಸ ಮಾಡಿದ್ದಾರೆ ಎಂಬುದು ಪಕ್ಷದ ವರಿಷ್ಠರಿಗೆ ಗೊತ್ತಿದೆ. ಹಿರಿಯರಾಗಿರುವ ಸಿದ್ದರಾಮಯ್ಯ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಅವರು ಜಾಣತನದಿಂದ ಜಾರಿಕೊಂಡರು.
(ದಟ್ಸ್
ಕನ್ನಡ
ವಾರ್ತೆ)
ಅಡ್ವಾಣಿ
ಪಿಎಂ
ಮಾಡುವುದೇ
ಏಕೈಕ
ಗುರಿ
:
ಸಿಎಂ