ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಿ
ಶಿವಮೊಗ್ಗ, ಡಿ. 31: ಗ್ರಾಮಾಂತರ ಪ್ರದೇಶದ ಅನಕ್ಷರಸ್ಥ ಮಹಿಳೆಯರು, ನಿರುದ್ಯೋಗಿಗಳು ಸ್ವಯಂ ಉದ್ಯೋಗ ಮಾಡಿ ಆರ್ಥಿಕವಾಗಿ ಸದೃಢರಾಗಬೇಕೆಂದು ಗ್ರಾಮಾಂತರ ಶಾಸಕ ಕೆ.ಜಿ.ಕುಮಾರಸ್ವಾಮಿ ತಿಳಿಸಿದರು.
ಹೊಳೆಹೊನ್ನೂರಿನಲ್ಲಿ ಜನ ಶಿಕ್ಷಣ ಸಂಸ್ಥೆ, ಗ್ರಾಮ ಪಂಚಾಯಿತಿ ಹಾಗೂ ಕ್ಷತ್ರಿಯ ಮರಾಠ ಸೇವಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೌಶಲ್ಯ ದರ್ಶಿನಿ -2008 ರ ಕರಕುಶಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶದ ಮಹಿಳೆಯರು ಸಿದ್ಧಪಡಿಸಿದ ಕರಕುಶಲ ವಸ್ತುಗಳ ಮಾರಾಟ ದೃಷ್ಠಿಯಿಂದ ಹೋಬಳಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮಾರಾಟ ಕೇಂದ್ರಗಳನ್ನು ತೆರೆಯಲು ಸರಕಾರ ಮುಂದಾಗಿದೆ ಎಂದು ಹೇಳಿದ ಅವರು, ಸ್ವಯಂ ಉದ್ಯೋಗಿಗಳನ್ನು ಪ್ರೋತ್ಸಾಹಿಸಲು ಜನಶಿಕ್ಷಣ ಸಂಸ್ಥೆ ಹಮ್ಮಿಕೊಂಡಿರುವ ತರಬೇತಿ ಶ್ಲಾಘನೀಯವೆಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಅನ್ಬುಕುಮಾರ್ ಅವರು ಮಾತನಾಡಿ, ಗ್ರಾಮಾಂತರ ಪ್ರದೇಶದ ಜನರಿಗಾಗಿ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗ ಪಡೆಯುವಂತೆ ತಿಳಿಸಿದರು. ಕರಕುಶಲ ವಸ್ತುಗಳನ್ನು ತಯಾರಿಸು ವಾಗ ಅದರ ಗುಣಮಟ್ಟದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಲಹೆ ಮಾಡಿದ ಅವರು, ಸಮಾರಂಭದಲ್ಲಿ ತರಬೇತಿ ಹೊಂದಿದ ಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
(ದಟ್ಸ್ ಕನ್ನಡ ವಾರ್ತೆ)