'ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ'
ಬೆಂಗಳೂರು, ಜ. 6 : ನೈಸ್ ವಿಚಾರದಲ್ಲಿ ಸತ್ಯಾಂಶ ಬಯಲಾಗಲಿದೆ ಎನ್ನುವ ಭಯದಿಂದ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಿಂದೇಟು ಹಾಕಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಧೈರ್ಯವಿದ್ದರೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಗೌಡರು ಮರು ಸವಾಲು ಹಾಕಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಆ ಭಯದಿಂದಲೋ ಏನೊ ಯಡಿಯೂರಪ್ಪ ವಿರೋಧ ಪಕ್ಷಗಳೊಂದಿಗೆ ಸುಮಧುರ ಬಾಂಧವ್ಯದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. ಆರಂಭದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದ ಅವರು, ಈಗ ಅದಕ್ಕೆ ವಿರುದ್ಧವಾದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಟೀಕಿಸಿದರು.
ಸುಪ್ರಿಂಕೋರ್ಟನ್ನು ವಂಚಿಸಲು ನೈಸ್ ಸಂಸ್ಥೆಯವರು ಅಧಿಕಾರಿಗಳು, ರಾಜಕಾರಣಿಗಳನ್ನು ಹೇಗೆ ಬಳಿಸಿಕೊಂಡರು ಎಂಬುದನ್ನು ತಾವು ಪುಸ್ತಕ ರೂಪದಲ್ಲಿ ಹೊರತಂದಿದ್ದು, ಅದನ್ನು ಜನತೆಯ ಮುಂದೆ ಇಡುತ್ತೇವೆ. ಪುಸ್ತಕದ ಪ್ರತಿಯನ್ನು ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಸತ್ ಸದಸ್ಯರು, ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಗಣ್ಯರಿಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)