ಶಿವಮೊಗ್ಗದಲ್ಲಿ ಆರ್ಯುವೇದ ವಿವಿ ಸ್ಥಾಪನೆ?
ಶಿವಮೊಗ್ಗ, ಜ. 16 : ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದರೆ ಶಿವಮೊಗ್ಗದಲ್ಲಿ ಆರ್ಯುವೇದ ವಿಶ್ವವಿದ್ಯಾಲಯ ಸ್ಥಾಪನೆಗೆ 15 ಎಕರೆ ಭೂಮಿ ನೀಡಲು ಸರ್ಕಾರದ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ತಿಳಿಸಿದ್ದಾರೆ.
ಸರ್ಕಾರಿ ಆರ್ಯುವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಯಚಾಮರಾಜೇಂದ್ರ ಭಾರತೀಯ ವೈದ್ಯಕೀಯ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ನೂತನ ಹೊರರೋಗಿಗಳ ವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಆರ್ಯುವೇದ ವಿಶ್ವವಿದ್ಯಾಲಯ ಸ್ಥಾಪನೆಗೆ ಏಳು ಎಕರೆ ಭೂಮಿಯನ್ನು ಮಂಡಳಿ ಕೇಳಿತ್ತು. ಆದರೆ ಬೆಂಗಳೂರಿನಲ್ಲಿ ಭೂಮಿ ಬೆಲೆ ಗಗನಕ್ಕೇರಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ 15 ಎಕರೆ ಭೂಮಿ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ರಾಮಚಂದ್ರಗೌಡ ಸ್ಪಷ್ಟಪಡಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳು ಆರ್ಯುವೇದ, ಹೋಮಿಯೋಪತಿ, ಯುನಾನಿ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ಇಲ್ಲದೇ ನೇರವಾಗಿ ಸೀಟು ಪಡೆಯುವ ಮೂಲಕ ಈ ಪದ್ಧತಿಗಳಿಗೆ ಪ್ರೋತ್ಸಾಹ ಆರಂಭಿಸಲಾಗುವುದು ಎಂದರು.
(ದಟ್ಸ್ ಕನ್ನಡ ವಾರ್ತೆ)