ವಿಧಾನ ಪರಿಷತ್ ಉಪಸಭಾಪತಿಯಾಗಿ ಪುಟ್ಟಣ್ಣ
ಬೆಳಗಾವಿ, ಜ. 22 : ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಬುಧವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಕಾಂಡಕನಹಳ್ಳಿಯಲ್ಲಿ 22-4-1966 ರಂದು ಜನಿಸಿದರು. ಪುಟ್ಟಣ್ಣ ಅವರು ಸ್ನಾತಕೋತ್ತರ ಪದವೀಧರರಾಗಿದ್ದು, ವ್ಯವಸಾಯ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಎರಡನೇ ಬಾರಿಗೆ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆ ಆಗಿರುವ ಜೆಡಿಎಸ್ ಪಕ್ಷದ ಪುಟ್ಟಣ್ಣ ಅವರು ವಿದ್ಯಾರ್ಥಿ ಜೀವನದಿಂದಲೇ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಈ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲಿಂಗ್ ಸದಸ್ಯರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 2002ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತರಾದ ಪುಟ್ಟಣ್ಣ ಅವರು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಹಾಗೂ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ನಾಮ ನಿರ್ದೇಶನ ಸೆನೆಟ್ ಸದಸ್ಯರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
2008ರಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಅವರು ವಿಧಾನ ಪರಿಷತ್ ಸದಸ್ಯರಾಗಿ 2ನೇ ಬಾರಿಗೆ ಆಯ್ಕೆ ಆಗಿದ್ದಾರೆ. ಅಮೇರಿಕದ ಹೋಸ್ಟನ್ ನಗರದಲ್ಲಿ ಮಾರ್ಚ್ 2000ದಲ್ಲಿ ನಡೆದ ಸಹಸ್ರಮಾನ ವಿಶ್ವ ಕನ್ನಡ ಸಮ್ಮೇಳನದಲ್ಲಿಯೂ ಸಹ ಪುಟ್ಟಣ್ಣ ಅವರು ಭಾಗವಹಿಸಿದ್ದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ಸಂದರ್ಭದಲ್ಲಿ ಸದನದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಅವರು ಪುಟ್ಟಣ್ಣ ಅವರನ್ನು ಅಭಿನಂದಿಸಿ ಪಕ್ಷ ಬೇಧ ಮರೆತು ಅವಿರೋಧವಾಗಿ ಆಯ್ಕೆ ಮಾಡುವ ಈ ಸತ್ಸಂಪ್ರದಾಯ ಉಭಯ ಸದನಗಳಲ್ಲಿ ಬೆಳೆದು ಬರಬೇಕೆಂದರು. ಪರಿಷತ್ತಿನ ಸಭಾನಾಯಕರಾದ ಗೃಹ ಸಚಿವ ಡಾ ವಿಎಸ್ ಆಚಾರ್ಯ ಹಾಗೂ ವಿರೋಧ ಪಕ್ಷದ ನಾಯಕ ಉಗ್ರಪ್ಪ ಅವರು ನೂತನ ಸಭಾಪತಿಗಳನ್ನು ಅಭಿನಂದಿಸಿ ಮಾತನಾಡಿದರು.
(ದಟ್ಸ್
ಕನ್ನಡ
ವಾರ್ತೆ)