ಹೊಸಕೋಟೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭ
ಹೊಸಕೋಟೆ, ಜ. 27 : ಹೊಸಕೋಟೆಯಲ್ಲಿ ಶೀಘ್ರದಲ್ಲಿಯೇ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭವಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಸಚಿವ ಬಿ ಎನ್ ಬಚ್ಚೇಗೌಡ ಅವರು ಇಲ್ಲಿ ಇಂದು ಪ್ರಕಟಿಸಿದರು.
ಹೊಸಕೋಟೆಯ ಬಿ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾತನಾಡುತ್ತಿದ್ದರು. ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶ ಒದಗಿಸಲು ಅನುಕೂಲವಾಗುವಂತೆ ಹೊಸಕೋಟೆಯಲ್ಲಿ ಸ್ಥಾಪಿಸಿದ ಕೈಗಾರಿಕಾ ತರಬೇತಿ ಸಂಸ್ಥೆಗೆ ದೊರೆತ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಇದೇ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ 42 ಕೋಟಿ ರೂ ವೆಚ್ಚದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ, ಇದಕ್ಕಾಗಿ ಈಗಾಗಲೇ 12 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ ಸಚಿವರು, ಹೊಸಕೋಟೆ ಪಟ್ಟಣಕ್ಕೆ ಎಲೆ ಮಲ್ಲಪ್ಪ ಶೆಟ್ಟರ ಕೆರೆಯಿಂದ ಕುಡಿಯುವ ನೀರು ಪೂರೈಸಲು ಐದು ಕೋಟಿ ರೂ ಮೀಸಲಿರಿಸಲಾಗಿದೆ ಎಂದು ಹೇಳಿದರು.
ಹೊಸಕೋಟೆ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 33 ಕೋಟಿ ರೂ ಯೋಜನೆಯನ್ನು ರೂಪಿಸಲಾಗಿದೆ. ಹೊಸಕೋಟೆ ತಾಲ್ಲೂಕಿನಲ್ಲಿ ರಸ್ತೆಗಳ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿಪಡಿಸಲು 10 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಹಾಲು ಉತ್ಪಾದಕರ ಸಂಘಗಳ ಹೆಚ್ಚಳಕ್ಕೆ ಸಲಹೆ












Click it and Unblock the Notifications