ಜಾಗೃತಿ ಅಭಿಯಾನಕ್ಕೆ ಅಡ್ಡಿಪಡಿಸಿದರೆ ಉಗ್ರ ಕ್ರಮ
ಚಿತ್ರದುರ್ಗ, ಫೆ. 5 : ಭಯೋತ್ಪಾದನೆ ದೇಶಕ್ಕೆ ಅಂಟಿಕೊಂಡಿರುವ ದೊಡ್ಡ ಪಿಡುಗು, ಇದನ್ನು ಹೋಗಲಾಡಿಸುವುದು ಸರ್ಕಾರ ಸೇರಿದಂತೆ ಎಲ್ಲರ ಕರ್ತವ್ಯವಾಗಿದೆ ಎನ್ನುವುದು ನನ್ನ ಭಾವನೆ. ಸರ್ಕಾರ ಆರಂಭಿಸಿರುವ ಭಯೋತ್ಪಾದನೆ ವಿರುದ್ಧ ಜಾಗೃತಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ನಗರದಲ್ಲಿ ಏರ್ಪಡಿಸಲಾಗಿದ್ದ ಬಂಜಾರ ಸಮುದಾಯದ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸರ್ಕಾರ ಆರಂಭಿಸಿರುವ ಜಾಗೃತಿ ಕಾರ್ಯಕ್ರಮವನ್ನು ವಿರೋಧಿಸುವವರು ಇನ್ನೊಂದು ಸಲ ಅತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಭಯೋತ್ಪಾದನೆಯಿಂದ ದೇಶಕ್ಕೆ ಆಗಿರುವ ನಷ್ಟ, ಉಂಟಾಗಿರುವ ಭೀತಿ, ಎದುರಿಸಬೇಕಾಗಿರುವ ಕ್ಲಿಷ್ಟಕರ ಸನ್ನಿವೇಶಗಳನ್ನು ಬಿಡಿಸಿಹೇಳಬೇಕಿಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸರ್ಕಾರ ಅಧಿಕೃತವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಸ್ಪಷ್ಟಪಡಿಸಿದರು.
ಪ್ರತಿಪಕ್ಷಗಳ ನಾಯಕರಾದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಕಾಂಗ್ರೆಸ್ ಅಧ್ಯಕ್ಷ ಆರ್ ವಿ ದೇಶಪಾಂಡೆ ಹಾಗೂ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಇದನ್ನು ಕೇಸರೀಕರಣ ಎಂದು ಟೀಕಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಪ್ರತಿಪಕ್ಷಗಳ ನಾಯಕರು ಎಲ್ಲ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಮನವಿ ಮಾಡಿಕೊಂಡರು.
ಸರ್ಕಾರ ಆರಂಭಿಸಿರುವ ಭಯೋತ್ಪಾದನೆ ವಿರೋಧಿ ಜನಜಾಗೃತಿ ಅಭಿಯಾನವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಯಾರಾದರೂ ದಾಳಿ, ಪ್ರತಿಭಟನೆ ನಡೆಸಿದಲ್ಲಿ ಅಂತವರ ವಿರುದ್ಧ ಬಿಗಿಯಾದ ಕ್ರಮಕೈಗೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:ಉಗ್ರರ ವಿರೋಧಿ ಅಭಿಯಾನಕ್ಕೆ ಕೈ ಅಡ್ಡಿ, ಲಾಠಿ ಚಾರ್ಜ್












Click it and Unblock the Notifications