ಭಯೋತ್ಪಾದನಾ ಜಾಗೃತಿ, ಡಿಕೆಶಿ, ಬೈರೇಗೌಡ ಬಂಧನ
ಬೆಂಗಳೂರು, ಫೆ. 5 : ಭಯೋತ್ಪಾದನೆ ವಿರೋಧಿ ಅಭಿಯಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಜ್ಯಾದ್ಯಾಂತ ಪ್ರತಿಭಟನೆಗೆ ಕರೆ ನೀಡಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ಅವರನ್ನು ಇಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಇದಕ್ಕೂ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅಭಿಯಾನಕ್ಕೆ ಅಡ್ಡಿಪಡಿಸುವವರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಈ ಮೂಲಕ ಭಯೋತ್ಪಾದನಾ ವಿರೋಧಿ ಅಭಿಯಾನ ರಾಜಕೀಯ ಪಕ್ಷಗಳ ಸಂಘರ್ಷಕ್ಕೆ ಕಾರಣವಾಗಿರುವುದಂತೂ ಸುಳ್ಳಲ್ಲ.
ಭಯೋತ್ಪಾದನಾ ವಿರೋಧಿ ಅಭಿಯಾನದ ಜಾಗೃತಿ ಕಾರ್ಯಕ್ರಮ ಅಧಿಕೃತ ಸರ್ಕಾರಿ ಕಾರ್ಯಕ್ರಮವಾಗಿದೆ. ಇದಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ಮುಖ್ಯಸ್ಥರ ಸಭೆಯನ್ನು ನಗರದ ಸೆಂಟ್ರಲ್ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಒಳನುಗ್ಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಹಾಕತೊಡಗಿದರು.
ಪ್ರತಿಭಟನಾಕಾರರ ಮನವೂಲಿಕೆ ಕಾರ್ಯ ವಿಫಲವಾಗಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಸರ್ಕಾರದ ವರ್ತನೆಯನ್ನು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್, ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ಬಲವಾಗಿ ಖಂಡಿಸಿದ್ದರು. ಶಿಕ್ಷಣದಲ್ಲಿ ಯಾವ ಕಾರಣಕ್ಕೂ ಕೇಸರೀಕರಣ ತುಂಬಲು ಬಿಡುವುದಿಲ್ಲ ಎಂದು ಸ್ಪಷ್ಪಪಡಿಸಿದ್ದರು.
ಸರ್ಕಾರ ಆಯೋಜಿಸಿರುವ ಭಯೋತ್ಪಾದನಾ ವಿರೋಧಿ ಅಭಿಯಾನದ ನೇತೃತ್ವವನ್ನು ಆರ್ಎಸ್ಎಸ್ ಮತ್ತು ಎಬಿವಿಪಿ ವಹಿಸಿಕೊಂಡಿರುವುದು ಕಾಂಗ್ರೆಸ್ ಕೋಪಕ್ಕೆ ಕಾರಣವಾಗಿದೆ. ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತೆತ್ತಿದರೆ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಅವರನ್ನು ವಿನಾಕಾರಣ ಟೀಕಿಸಲಾಗುತ್ತಿದೆ. ಹೀಗಿದ್ದಾಗ ನಾವು ಹೇಗೆ ಬೆಂಬಲ ನೀಡಬೇಕು ಎನ್ನುವುದು ಡಿಕೆಶಿ ಸೇರಿ ಅನೇಕ ಕಾಂಗ್ರೆಸ್ ಮುಖಂಡರ ಅನಿಸಿಕೆಯಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಜಾಗೃತಿ ಅಭಿಯಾನಕ್ಕೆ ಅಡ್ಡಿಪಡಿಸಿದರೆ ಉಗ್ರ ಕ್ರಮ












Click it and Unblock the Notifications