ರೇಣುಕಾ ಹೇಳಿಕೆಗೆ ಯಡಿಯೂರಪ್ಪ ಖಂಡನೆ
ಬೆಂಗಳೂರು, ಫೆ. 8 : ಮಂಗಳೂರು ಪಬ್ ಮೇಲಿನ ದಾಳಿ ಹಾಗೂ ಕೇರಳ ಶಾಸಕರ ಪುತ್ರಿ ಅಪಹರಣ ನಾಟಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಗತ್ಯ ಕಾನೂನು ಕ್ರಮಕೈಗೊಂಡಿದೆ. ಈ ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಸಹ ಬಂಧಿಸಲಾಗಿದೆ. ಇಷ್ಟಾದರೂ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ಅವರು ವಿನಾಕಾರಣ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವ ಮೂಲಕ ಗೂಬೆ ಕೂರಿಸುವ ಕೆಲಸ ಮುಂದುವರೆಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿ ಸತ್ಯಾಸತ್ಯತೆ ಹೊರಬರಲಿದೆ ಎಂದರು. ಕೇಂದ್ರ ಸಚಿವೆ ರೇಣುಕಾ ಚೌಧರಿ ಅನಗತ್ಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು. ಮಂಗಳೂರು ಪಬ್ ದಾಳಿಯ ಬೆನ್ನಲ್ಲೇ ಕೇರಳದ ಶಾಸಕ ಸಿ ಎಚ್ ಕುಇಂಬು ಅವರ ಪುತ್ರಿ ಅಪಹರಣಕ್ಕೆ ಸಂಬಂಧಿಸಿದಂತೆ ರೇಣುಕಾ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಲ್ಲಿನ ಬಿಜೆಪಿ ಸರ್ಕಾರ ಕೋಮುವಾದಿ ಸಂಘಟನೆಗಳ ಕುಮ್ಮಕ್ಕು ನೀಡುವ ಮೂಲಕ ಕರ್ನಾಟಕವನ್ನು ತಾಲೀಬಾನಿಕರಣ ಮಾಡಲು ಹೊರಟಿದ್ದಾರೆ. ಈ ಎರಡು ಪ್ರಕರಣಗಳು ರಾಷ್ಟ್ರೀಯ ಭದ್ರತೆಯನ್ನು ಪ್ರಶ್ನಿಸುವಂತಿವೆ ಎಂದು ಎಂದು ಚೌಧರಿ ಕಳವಳ ವ್ಯಕ್ತಪಡಿಸಿದ್ದರು.
ಮಂಗಳೂರಿನಲ್ಲಿ ಸೌಹಾರ್ದ ಸಭೆ
ಪಬ್ ದಾಳಿ ಹಾಗೂ ಶಾಸಕರ ಪುತ್ರಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಗೃಹ ಸಚಿವ ವಿ ಎಸ್ ಆಚಾರ್ಯ ಮತ್ತು ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ನೇತೃತ್ವದಲ್ಲಿ ಶಾಂತಿ ಸೌಹಾರ್ದ ಸಭೆ ನಡೆಯುತು. ಸಭೆಯಲ್ಲಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಶಾಸಕರ ಪುತ್ರಿ ಅಪಹರಣ 5 ಬಂಧನ












Click it and Unblock the Notifications