ಲೋಕಸಭೆ ಚುನಾವಣೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ?
ಬೆಂಗಳೂರು, ಫೆ. 9 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಇತ್ತೀಚೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಗ್ರಾಸವಾಗಿದೆ. ಭೇಟಿ ಸಂದರ್ಭದಲ್ಲಿ ಏನು ಚರ್ಚೆ ನಡೆಯಿತು ಎನ್ನವುದು ತಿಳಿದು ಬಂದಿಲ್ಲ, ಆದರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆದಿರುವ ಸಾಧ್ಯತೆಯಂತೂ ತಳ್ಳಿಹಾಕುವಂತಿಲ್ಲ.
ಇದಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಕೂಡ ಎಲ್ಲಿಯಾ ಬಾಯಿಬಿಟ್ಟಿಲ್ಲ. ಈ ವಿಷಯ ರಾಜ್ಯ ಕಾಂಗ್ರೆಸ್ ನಾಯಕರಿಗೂ ಗೊತ್ತಿಲ್ಲ ಎಂದು ವಿಶ್ವಸನೀಯ ಮೂಲಗಳು ಹೇಳಿವೆ. ಒಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಂಭವನೀಯತೆ ಇದೆ. ಆದರೆ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತೃತೀಯ ಬಲವರ್ಧನೆ ಕುರಿತು ಮಾತನಾಡುತ್ತಿರುವುದು ಅನೇಕ ಗೊಂದಲಗಳಿಗೆ ಕಾರಣವಾಗಿದೆ.
ಈ ಮಧ್ಯೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಒಂದು ವೇಳೆ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಲ್ಲಿ ಸಿದ್ದು ಪಕ್ಷ ತ್ಯಜಿಸುವ ಸಾಧ್ಯತೆಯಿದ್ದು, ಕೆಲವೆ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಬಹುದು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications