ಶಿಕ್ಷಣಕ್ಕೆ ಹೆಚ್ಚು ಅನುದಾನ ಕೇಂದ್ರಕ್ಕೆ ಕಾಗೇರಿ ಒತ್ತಾಯ
ನವದೆಹಲಿ, ಫೆ. 11 : ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ವಿವಿಧ ಬಾಬ್ತುಗಳಡಿಯಲ್ಲಿ ನೀಡುತ್ತಿರುವ ಯೋಜನಾ ಗಾತ್ರವನ್ನು 2009-10ನೇ ಸಾಲಿಗೆ 1568.16 ಕೋಟಿ ರೂ.ಗಳಿಗೆ ಏರಿಸಬೇಕು ಎಂದು ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಅರ್ಜುನ್ ಸಿಂಗ್ ಅವರನ್ನು ಒತ್ತಾಯಿಸಿದರು.
ಇಲ್ಲಿ ಏರ್ಪಡಿಸಲಾಗಿದ್ದ 55ನೇ ಕೇಂದ್ರ ಶಿಕ್ಷಣ ಸಲಹಾ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. 2008-09ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಸರ್ವ ಶಿಕ್ಷಾ ಅಭಿಯಾನದಡಿಯಲ್ಲಿ 960.42 ಕೋಟಿ ರೂ.ಗಳನ್ನು ನೀಡಿತ್ತು. ಆದರೆ, ಈ ಬಾರಿ ಹೆಚ್ಚಿನ ಅನುದಾನ ಬೇಕಾಗುತ್ತದೆ. ಯಾಕೆಂದರೆ, ರಾಜ್ಯದಲ್ಲಿ ಈ ಬಾರಿ 'ಕಲಿ- ನಲಿ' ಯೋಜನೆಯನ್ನು 1 ಮತ್ತು 2ನೇ ತರಗತಿಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ. ಜೊತೆಗೆ, ಇದನ್ನು 3 ಮತ್ತು 4ನೇ ತರಗತಿಗಳಿಗೆ 2010-11ನೇ ಸಾಲಿನಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಶಿಕ್ಷಣದ ದೃಷ್ಟಿಯಿಂದ ಹಿಂದುಳಿದ ಜಿಲ್ಲೆಗಳಲ್ಲಿ ಹೆಚ್ಚು ಪ್ರಮಾಣದ ಶಿಕ್ಷಕರ ನೇಮಕಾತಿ ಮತ್ತು ಇನ್ನಷ್ಟು ಕೊಠಡಿಗಳನ್ನು ಕಟ್ಟಿಸಲು ಅಧಿಕ ಪ್ರಮಾಣದ ಹಣಕಾಸಿನ ನೆರವು ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚು ಅನುದಾನದ ನೆರವು ಕೋರಲಾಗಿದೆ ಎಂದು ಅವರು ಹೇಳಿದರು. ಸರ್ವ ಶಿಕ್ಷಾ ಅಭಿಯಾನದಲ್ಲಿ ರಾಜ್ಯ ಸರ್ಕಾರ ಗಮನಾರ್ಹ ಸಾಧನೆ ಮಾಡಿದೆ. ಆದರೂ, ರಾಜ್ಯಕ್ಕೆ ನೀಡಲಾಗುತ್ತಿರುವ ಅನುದಾನವನ್ನು ಇತರ ರಾಜ್ಯಗಳೊಂದಿಗೆ ಹೋಲಿಸಿ ನೋಡಿದರೆ ತುಂಬ ಕಡಿಮೆ ಪ್ರಮಾಣದಲ್ಲಿ ಇದೆ ಎಂಬುದು ತಿಳಿಯುತ್ತದೆ ಎಂದು ಅವರು ಹೇಳಿದರು.
ಸರ್ವ ಶಿಕ್ಷಾ ಅಭಿಯಾನದ ಮಾನದಂಡದಲ್ಲಿ ರಾಜ್ಯದಿಂದ ರಾಜ್ಯಕ್ಕೆ ಪ್ರತ್ಯೇಕ ಅಳತೆಗೋಲು ನಿರ್ಧರಿಸಬೇಕು. ವಿದ್ಯಾರ್ಥಿ- ಶಿಕ್ಷಕರ ಅನುಪಾತವನ್ನು 1:40ರಿಂದ 1:30ಕ್ಕೆ ಇಳಿಸಿ, ಇದರಿಂದ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ಹೆಚ್ಚಿನ ಶಿಕ್ಷಕರ ನೇಮಕಾತಿ ಮಾಡಬೇಕು. ಈ ಅಭಿಯಾನದಡಿ ಅಥವಾ ಶಿಕ್ಷಣ ಇಲಾಖೆಯ ವಿವಿಧ ಯೋಜನೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಕ್ಕೆ ಮತ್ತು ತರಬೇತಿಗಾಗಿ ಹೆಚ್ಚು ಮಹತ್ವ ನೀಡಬೇಕು ಎಂದು ಒತ್ತಾಯಿಸಿದರು.
11ನೇ ಯೋಜನೆಯಲ್ಲಿ ಶಿಕ್ಷಣಕ್ಕೆ ಕನಿಷ್ಠ ಶೇ 10ರಷ್ಟು ಹಣ ಮೀಸಲಿಡಬೇಕು, ಕರ್ನಾಟಕದ ಬಹು ವರ್ಷಗಳ ಬೇಡಿಕೆಯಾದ ಐಐಟಿಯನ್ನು ರಾಜ್ಯಕ್ಕೆ ಮಂಜೂರು ಮಾಡಬೇಕು, ವಿಜಾಪುರ ಮತ್ತು ತುಮಕೂರು ವಿಶ್ವವಿದ್ಯಾಲಯಗಳಿಗೆ ಯುಜಿಸಿ ಅನುದಾನ ನೀಡಬೇಕು' ಎಂದು ಅವರು ಮನವಿ ಮಾಡಿದರು. ಸಂಸ್ಕೃತ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಶಿಕ್ಷಕರ ನೇಮಕಾತಿ, ವಿದ್ಯಾರ್ಥಿ ವೇತನದಲ್ಲಿ ಹೆಚ್ಚಳ. ಕಂಪ್ಯೂಟರ್ ಇತ್ಯಾದಿ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ- ಮುಂತಾದವುಗಳಿಗೆ ಹೆಚ್ಚಿನ ಹಣಕಾಸು ನೆರವು ನೀಡಬೇಕು ಎಂದು ಅವರು ಆಗ್ರಹಿಸಿದರು.
ಹೆಚ್ಚು ಅಧಿಕಾರ
ರಾಜ್ಯದಲ್ಲಿ ಐಸಿಎಸ್ಇ ಮತ್ತು ಸಿಬಿಎಸ್ಸಿ ಶಾಲೆಗಳನ್ನು ನಡೆಸುತ್ತಿರುವ ಹಲವು ಶಾಲೆಗಳ ಆಡಳಿತ ಮಂಡಳಿಗಳು ಯಾವುದೇ ಲಂಗುಲಗಾಮು ಇಲ್ಲದಂತೆ ವರ್ತಿಸುತ್ತಿವೆ. ಮನಬಂದಂತೆ ಅವುಗಳು ಶುಲ್ಕ ವಸೂಲಿ ಮಾಡುತ್ತಿವೆ. ಇದರಿಂದ ಸಮಾಜದ ಎಲ್ಲ ವರ್ಗದ ಜನರಿಗೂ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಬಿಎಸ್ಸಿ ಮತ್ತು ಐಸಿಎಸ್ಸಿ ಶಾಲೆಗಳ ವ್ಯವಸ್ಥಾಪಕ ಮಂಡಳಿಗಳ ಮೇಲೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಹೆಚ್ಚು ಅಧಿಕಾರಗಳು ಇರಬೇಕು. ಅಂಥ ಅಧಿಕಾರಗಳನ್ನು ರಾಜ್ಯ ಸರ್ಕಾರಗಳಿಗೆ ಕೇಂದ್ರ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಈಗಾಗಲೇ ಗ್ರಾಮೀಣ ಭಾರತದಲ್ಲಿ 43 ಪಾಲಿಟೆಕ್ನಿಕ್ ಪ್ರಾರಂಭಿಸಲು ನಿರ್ಧರಿಸಿದೆ. 11ನೇ ಯೋಜನೆಯಲ್ಲಿ ಇವುಗಳನ್ನು ಒಳಗೊಂಡಂತೆ ಹೆಚ್ಚಿನ ಪಾಲಿಟೆಕ್ನಿಕ್ ಮಂಜೂರಾತಿ ನೀಡಬೇಕು. ರಾಜ್ಯದ 21 ಪದವಿ ಕಾಲೇಜುಗಳಿಗೆ ಮಂಜೂರಾತಿ ನೀಡಬೇಕು. ಜೊತೆಗೆ ಎಸ್ಸಿ, ಎಸ್ಟಿ ಜನಸಂಖ್ಯೆ ಹೆಚ್ಚಿರುವ ರಾಜ್ಯದ 16 ಜಿಲ್ಲೆಗಳಿಗೆ ಹೆಚ್ಚುವರಿ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕೇಂದ್ರೀಯ ವಿಶ್ವವಿದ್ಯಾಲಯವನ್ನು ಗುಲ್ಬರ್ಗಾದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರದ ಸಮಿತಿಯೊಂದು ಪರಿವೀಕ್ಷಣೆ ಮಾಡಿದೆ. ಕೂಡಲೇ ಅದಕ್ಕೆ ಅನುಮತಿ ನೀಡಬೇಕು. ಹಾಗೂ ಮೈಸೂರಿನಲ್ಲಿ ವಿಶ್ವದರ್ಜೆಯ ವಿಶ್ವವಿದ್ಯಾಲಯ ಸ್ಥಾಪಿಸಲು ಕೇಂದ್ರೀಯ ಸಮಿತಿಯಿಂದ ಪರಿಶೀಲನೆ ನಡೆಸಿ, ಕೂಡಲೇ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications