ಕಾಂಗ್ರೆಸ್ಸಿಗರಿಂದ ಪುಡಿಯಾದ ಕುಲಪತಿಗಳ ಕಚೇರಿ
ಮೈಸೂರು, ಫೆ. 12 : ರಾಜ್ಯ ಸರ್ಕಾರ ಕೈಗೊಂಡಿರುವ ಭಯೋತ್ಪಾದನೆ ವಿರೋಧಿ ಅಭಿಯಾನಕ್ಕೆ ಕಾಂಗ್ರೆಸ್ ಕಾರ್ಯಕರ್ತಕರಿಂದ ವಿರೋಧ ಇಂದು ಕೂಡ ಮುಂದುವರೆದಿದೆ. ಶುಕ್ರವಾರ ಇಲ್ಲಿ ನಡೆಯಲಿರುವ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿರುವುದನ್ನು ಪ್ರತಿಭಟಿಸಿ ಎನ್ ಎಸ್ ಯುಐ ಕಾರ್ಯಕರ್ತರು ವಿಶ್ವವಿದ್ಯಾಲಯದೊಳಗೆ ನುಗ್ಗಿ ಕುಲಪತಿಗಳ ಕಚೇರಿಯ ಪೀಠೋಪಕರಣಗಳನ್ನು ಸಂಪೂರ್ಣ ಧ್ವಂಸ ಮಾಡಿ ಸರ್ಕಾರ ವಿರುದ್ದ ಘೋಷಣೆ ಕೂಗಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಭಯೋತ್ಪಾದನೆ ವಿರೋಧಿ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಮೈದಾನದಲ್ಲಿ ಸಕಲ ಸಿದ್ಧತೆಗಳು ಆರಂಭವಾಗಿವೆ. ಅಭಿಯಾನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಗುಂಪೊಂದು ವಿಶ್ವವಿದ್ಯಾಲಯದೊಳಗೆ ನುಗ್ಗಿ ಕುಲಪತಿಗಳ ಕಚೇರಿ ಮೇಲೆ ದಾಳಿ ನಡೆಸಿ, ಅಲ್ಲಿದ್ದ ಮಹತ್ವದ ಕಡತಗಳು, ಕಂಪ್ಯೂಟರ್, ಫೋನ್, ಕೌಂಟರ್, ಕಿಟಕಿ ಗಾಜುಗಳು ಸೇರಿ ಕೈಗೆ ಸಿಕ್ಕ ಎಲ್ಲ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಯಾವುದೇ ಕಾರಣಕ್ಕೂ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಈ ಅಭಿಯಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಭಯೋತ್ಪಾದನಾ ವಿರೋಧಿ ಅಭಿಯಾನದ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಒಂದಂಶದ ಆರೋಪವಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications