ಅಭಿಯಾನ ವಿರೋಧಿಸಿದರೆ ಗೂಂಡಾ ಕಾಯಿದೆ
ನಂಜನಗೂಡು, ಫೆ.13 : ರಾಜ್ಯ ಸರ್ಕಾರ ಕೈಗೊಂಡಿರುವ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ವಿರೋಧಿಸುವ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಗೂಂಡಾ ಕಾಯಿದೆ ಅಡಿ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಇಲ್ಲಿನ ತಾಲ್ಲೂಕು ಪತ್ರಕರ್ತರ ಭವನ ಉದ್ಘಾಟಿಸಿ ಮಾತನಾಡಿದ ಅವರು, ಗುರುವಾರ ಮೈಸೂರು ವಿಶ್ವವಿದ್ಯಾಲಯ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಭಯೋತ್ಪಾದನಾ ವಿರೋಧಿ ಅಭಿಯಾನವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳ ಕಚೇರಿ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಪಬ್ ದಾಳಿ ನಡೆಸಿದ ಶ್ರೀರಾಮಸೇನೆ ಕಾರ್ಯಕರ್ತರಿಗೂ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳ ಕಚೇರಿಗೆ ದಾಳಿ ನಡೆಸಿದ ಕೃತ್ಯಕ್ಕೆ ಯಾವ ವ್ಯತ್ಯಾಸವಿದೆ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿ ಹೀಗೆ ಮುಂದುವರೆದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗೂಂಡಾ ಕಾಯಿದೆ ಅಡಿಯಲ್ಲಿ ಪ್ರಕರಣಗಳ ದಾಖಲು ಸರ್ಕಾರ ಹಿಂದೇಟು ಹಾಕುವುದಿಲ್ಲ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಕೇಂದ್ರ ಸರ್ಕಾರ ಭಯೋತ್ಪಾದನಾ ಕೃತ್ಯವನ್ನು ನಿಗ್ರಹಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಭಯೋತ್ಪಾದನಾ ವಿರೋಧಿ ಅಭಿಯಾನ ಆರಂಭಿಸಿದೆ. ಆದರೆ, ರಾಜ್ಯ ಕಾಂಗ್ರೆಸ್ ಅಭಿಯಾನವನ್ನು ವಿರೋಧಿಸುವ ಮೂಲಕ ಭಯೋತ್ಪಾದನೆ ಕುಮ್ಮಕ್ಕು ನೀಡತೊಡಗಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. ಪ್ರೇಮಿಗಳ ದಿನಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಯಡಿಯೂರಪ್ಪ ಎಚ್ಚರಿಸಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications