ಮುಡಾ ಸಾಮಾನ್ಯ ಸಭೆ ನಿರ್ಣಯಗಳು
ಮೈಸೂರು, ಫೆ. 17 : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮುಖ್ಯವಾಗಿ ರವೀಂದ್ರನಾಥ ಟ್ಯಾಗೂರ್ ಬಡಾವಣೆಯಲ್ಲಿ ನಿವೇಶನ ಹಂಚಿಕೆಗಾಗಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುವುದು. ನಗರದ ವ್ಯವಸ್ಥಿತ ಹಾಗೂ ಯೋಜನಾಬದ್ಧ ಬೆಳವಣಿಗೆ ಮತ್ತು ಭವಿಷ್ಯದ ಮೈಸೂರಿನ ಅಗತ್ಯಗಳು ಹಾಗೂ ಮೂಲ ಸೌಲಭ್ಯಗಳ ಬಗ್ಗೆ ಗ್ರೇಟರ್ ಮೈಸೂರು ಯೋಜನೆಯನ್ನು ಅನುಷ್ಠಾನಗೊಳಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿ, ಈ ಸಂಬಂಧ ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಪ್ರಾಧಿಕಾರದ ವತಿಯಿಂದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನೆಲ ಅಂತಸ್ತು ಹಾಗೂ ಎರಡು ಮಹಡಿಗಳುಳ್ಳ 3000 ಮನೆಗಳನ್ನು ನಿರ್ಮಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿತು. ಆಲನಹಳ್ಳಿ ಬಡಾವಣೆಗೆ 'ಲಲಿತಮಹಲ್ ನಗರ'ವೆಂದು ನಾಮಕರಣ ಮಾಡಲು ಹಾಗೂ 350.00 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ನಗರದ ಸರ್ಕಾರಿ ಭವನದ ಆವರಣದಲ್ಲಿ ಖಾಲಿ ಇರುವ ಪ್ರದೇಶವನ್ನು ಕಬ್ಬನ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರದ ಆಡಳಿತಾತ್ಮಕ ಒಪ್ಪಿಗೆಗಾಗಿ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು.
880.00 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಮೈಸೂರು ನಗರದ ಬನ್ನಿಮಂಟಪ ಬಡಾವಣೆಯಲ್ಲಿರುವ ಪಂಜಿನ ಕವಾಯತು ಮೈದಾನದಲ್ಲಿ ವಿಜಯದಶಮಿ ದಿನದಂದು ನಡೆಯಲಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಹೆಚ್ಚು ಜನರು ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ಎರಡು ಅಂತಸ್ತಿನ ವೀಕ್ಷಣಾ ಪ್ರಾಂಗಣವನ್ನು ನಿರ್ಮಿಸಲು ಸರ್ಕಾರಕ್ಕೆ ಆಡಳಿತಾತ್ಮಕ ಒಪ್ಪಿಗೆ ಪಡೆಯಲು ಪ್ರಸ್ತಾವನೆಯನ್ನು ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಯಿತು.
ಸ್ನೇಹ ಕಿರಣ್ ಆಫ್ ಮೈಸೂರು ಸ್ವಾಸ್ಥಿಕ್ ಸೊಸೈಟಿ ಸಂಸ್ಥೆಗೆ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಶೇಕಡ 50ರ ರಿಯಾಯಿತಿ ದರದಲ್ಲಿ ಸಿ.ಎ. ನಿವೇಶನಗಳನ್ನು ಮಂಜೂರು ಮಾಡಲು ನಿರ್ಧರಿಸಲಾಯಿತು. ಇಟ್ಟಿಗೆಗೂಡು ಮಹಾತ್ಮಗಾಂಧಿ ರಸ್ತೆಯಲ್ಲಿ ತರಕಾರಿ ಮಾರುವವರಿಗೆ ತಾತ್ಕಾಲಿಕ ಶೆಡ್, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲು ಹಾಗೂ ಬೆಲವತ್ತ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತೀರ್ಮಾನ ಕೈಗೊಂಡಿತು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications