249 ಗ್ರಾಮ ಪಂಚಾಯತಿಗಳು ಮೇಲ್ದರ್ಜೆಗೆ
ಗುಲ್ಬರ್ಗಾ, ಫೆ. 22 : ಸುಮಾರು 249 ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಶನಿವಾರ ಗುಲ್ಬರ್ಗಾ ವಿಭಾಗ ಮಟ್ಟದ ಪೌರಾಡಳಿತ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಮೈಸೂರು, ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ಈಗಾಗಲೇ ನಡೆಸಲಾಗಿದೆ. ವಿಭಾಗ ಮಟ್ಟದ ಪ್ರಗತಿ ಪರಿಶೀಲನೆ ನಂತರ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದರು.
2001ನೇ ಸಾಲಿನ ಜನಗಣತಿ ಪ್ರಕಾರ ಶೇಕಡ 34 ರಷ್ಟು ಜನ ನಗರ, ಪಟ್ಟಣ ಪ್ರದೇಶಗಳಲ್ಲಿದ್ದಾರೆ. ಈ ಸಂಖ್ಯೆ 2011ರ ವೇಳೆಗೆ ಶೇಕಡ 35.15 ಕ್ಕೆ ಏರುವ ನಿರೀಕ್ಷೆ ಇದೆ. ಕಳೆದ ಸಾಲಿನಲ್ಲಿ ಎಸ್ಎಫ್ಸಿ ಅನುದಾನದಡಿ 1088 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಶೇ 50 ಹಣ ಬಿಡುಗಡೆ ಮಾಡಲಾಗಿತ್ತು. ಈ ಹಣ ಗಣನೀಯ ಪ್ರಮಾಣದಲ್ಲಿ ಖರ್ಚಾಗಿಲ್ಲ. ಸುಮಾರು ಕೆಲಸಗಳು ಟೆಂಡರ್ ಪ್ರಕ್ರಿಯೆಯ ಹಂತದಲ್ಲಿವೆ ಎಂದರು.
ಪೌರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆಯಿಂದ ಕೆಲಸಗಳು ಆಗುತ್ತಿಲ್ಲ. ಈ ಸಂಸ್ಥೆಗಳಲ್ಲಿ ಖಾಲಿ ಇರುವ ಸುಮಾರು 800 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. 2008-09 ನೇ ಸಾಲಿನಲ್ಲಿ 24.80 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಇತ್ತು. 11.64 ಕೋಟಿ ರೂ. ಮಾತ್ರ ಸಂಗ್ರಹವಾಗಿದೆ. 13 ಕೋಟಿ ರೂ. ನೀರಿನ ತೆರಿಗೆ ಸಂಗ್ರಹಿಸುವ ಗುರಿ ಇದ್ದು, ಕೇವಲ 4.12 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದರು.
ಶೇ. 18ರ ಅನುದಾನದಡಿ ಪ್ರಸಕ್ತ ಸಾಲಿನಲ್ಲಿ 39.09 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, 6 ಕೋಟಿ ರೂ. ಖರ್ಚಾಗಿದೆ. ಪೌರಸಂಸ್ಥೆಗಳ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ಷಮತೆ ಹೆಚ್ಚಿಸಲು ಹಾಗೂ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಫೆಬ್ರವರಿ 28ರಂದು ಬೆಂಗಳೂರಿನಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.
(ದಟ್ಸ್
ಕನ್ನಡ
ವಾರ್ತೆ)
ನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ
ಕರಡಿಪಾಲು