ಬಳ್ಳಾರಿ ಬಂದ್ ಬಹುತೇಕ ಯಶಸ್ವಿ
ಬಳ್ಳಾರಿ, ಫೆ. 25 : ಕೃಷಿ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹಮ್ಮಿಕೊಂಡಿರುವ ಬಳ್ಳಾರಿ ಬಂದ್ ಬಹುತೇಕ ಯಶಸ್ವಿಯಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಗರದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮುಖಂಡರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ನಗರದ ಹೊರವಲಯ ಪೊಲೀಸ್ ಮೀಸಲು ಪಡೆಯ ಆವರಣದಲ್ಲಿ ಇರಿಸಿದೆ. ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದರಿಂದ ಕೆಲ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.
ಮಾಜಿ ಸಚಿವ ಎಂ ದಿವಾಕರ್ ಬಾಬು, ಜೆಡಿಎಸ್ ಜಿಲ್ಲಾಧ್ಯಕ್ಷ ಪ್ರತಾಪರೆಡ್ಡಿ, ಸಿಪಿಐ(ಎಂ) ಮುಖಂಡ ಜಿ ಎನ್ ನಾರಗಾಜ್ ಹಾಗೂ ರೈತರ ಸಂಘದ ಮುಖಂಡ ಮಾರುತಿ ಮಾನ್ಪಡೆ ಪ್ರತಿಭಟನೆ ನೇತೃತ್ವ ವಹಿಸಿದ್ದಾರೆ. ರಾಯಲ್ ವೃತ್ತದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಪೊಲೀಸರಿಗೂ ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿನ ನಡೆದಿದ್ದರಿಂದ ಪ್ರತಿಭಟನಾಕಾರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಿರಿವಾರ ಮತ್ತು ಚಾಗನೂರು ಉತ್ತಮ ಕೃಷಿ ಭೂಮಿ. ನೀರಾವರಿ ಪ್ರದೇಶವಾಗಿದ್ದರಿಂದ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಬೇಡ. ನಗರದ ಹೊರವಲಯದ ಹೊಸಪೇಟೆ-ಬಳ್ಳಾರಿ ರಸ್ತೆ ಮಧ್ಯೆ ಬರಡು ಭೂಮಿ ಇದೆ. ಅಲ್ಲಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮುಂದಾಗಲಿ ಎನ್ನುವುದು ಪ್ರತಿಭಟನಾಕಾರ ಆಗ್ರಹವಾಗಿದೆ.ಅಲ್ಲದೆ, ಕಳೆದ ಜನವರಿ 15 ರಂದು ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿ ಪ್ರಹಾರ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿರುವುದು ಅಕ್ಷಮ್ಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಯನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಯೋಜನೆಯನ್ನು ಕೂಡಲೇ ಕೈಬಿಡಬೇಕು ಹಾಗೂ ರೈತರ ಮೇಲೆ ಲಾಠಿ ಪ್ರಹಾರ ಮಾಡಲು ಅನುಮತಿ ನೀಡಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರೈತರ ಮನವೊಲಿಸಲು ಜಿಲ್ಲಾಧಿಕಾರಿಗಳು ನಡೆಸಿದ ಎರಡು ಸಂಧಾನ ಸಭೆಗಳು ವಿಫಲವಾಗಿವೆ.
(ದಟ್ಸ್ ಕನ್ನಡ ವಾರ್ತೆ)
ನಿಲ್ದಾಣ ನೋಡಲು ದೇವೇಗೌಡ ಬದುಕಿರಲಿ, ರೆಡ್ಡಿ