ನನ್ನ ಜೈಲಿಗೆ ಕಳುಹಿಸಲು ಯುಪಿಎ ಸಂಚು :ಮುಲಾಯಂ
ನವದೆಹಲಿ, ಫೆ. 27 : ದಿನಕ್ಕೊಂದು ಹೇಳಿಕೆ ನೀಡುತ್ತ ಸದಾ ಸುದ್ದಿಯಲ್ಲಿರುವ ಸಮಾಜವಾದಿ ಪಕ್ಷ ಇಂದು ಕೂಡ ತಮ್ಮ ಚಾಳಿಯನ್ನು ಮುಂದುವರೆಸಿದೆ. ಯಪಿಎ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರಿಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ ತಮ್ಮನ್ನು ಜೈಲಿಗೆ ಕಳುಹಿಸಲು ಯುಪಿಎ ಸಂಚು ರೂಪಿಸಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಆಕ್ರಮ ಆಸ್ತಿ ಗಳಿಕೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿ ನನ್ನ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ. ಸಿಬಿಐ ಪೊಲೀಸರು ನಡೆಸುತ್ತಿರುವ ತನಿಖೆಗೆ ಕೇಂದ್ರ ಸರ್ಕಾರ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದೆ. ಒಟ್ಟಿನಲ್ಲಿ ನನ್ನನ್ನು ಈ ವಿಷಯದಲ್ಲಿ ಬಲಿಪಶು ಮಾಡಹೊರಟಿದೆ ಎಂದು ಮುಲಾಯಂ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನನ್ನನ್ನು ಜೈಲಿಗೆ ಕಳುಹಿಸುವ ಹುನ್ನಾರ ಅಡಿಗಿರುವುದನ್ನು ತಳ್ಳಿಹಾಕುವಂತಿಲ್ಲ ಎಂದು ಅವರು ಆರೋಪಿಸಿದರು.
ಅಮೆರಿಕದೊಂದಿಗಿನ ನಾಗರಿಕ ಪರಮಾಣು ಒಪ್ಪಂದ ವಿಷಯಕ್ಕೆ ಸಂಬಂಧಿಸಿದಂತೆ ಯುಪಿಎ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಎಡಪಕ್ಷಗಳ ಹಿಂಪಡೆದಾಗ ಸಮಾಜವಾದಿ ಪಕ್ಷ ಸರ್ಕಾರಕ್ಕೆ ಬೆಂಬಲ ನೀಡುವುದರ ಮೂಲಕ ಯುಪಿಎ ಸರ್ಕಾರ ಉಳಿಯಲು ಸಹಾಯ ಮಾಡಿತ್ತು. ಅದನ್ನಾದರೂ ಆ ಸರ್ಕಾರದ ಮುಖ್ಯಸ್ಥರು ನೆನಪಿಸಿಕೊಳ್ಳಲಿ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications