ಸೈಕಲ್ ಹಿಡಿದ ಕೈ, ಎನ್ ಡಿಎ ತೆಕ್ಕೆಗೆ ಆರ್ಎಲ್ ಡಿ
ನವದೆಹಲಿ, ಮಾ, 2 : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಮೈತ್ರಿಗೆ ಮುಂದಾಗಿವೆ. ಇಂದು ಮಹತ್ತರ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಮುಖ್ಯವಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ರಂಗದೊಂದಿಗೆ ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಘೋಷಿಸಿದರೆ, ಎನ್ ಡಿಎ ರಾಷ್ಟ್ರೀಯ ಲೋಕದಳವನ್ನು ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ತೃತೀಯ ರಂಗದೊಂದಿಗೆ ಲೋಕಸಭೆ ಚುನಾವಣೆ ಎದುರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 25 ಲೋಕಸಭೆ ಸ್ಥಾನಗಳನ್ನು ನೀಡುವಂತೆ ಕಾಂಗ್ರೆಸ್ ಎಸ್ಪಿ ಮುಖಂಡರಲ್ಲಿ ಮನವಿ ಮಾಡಿಕೊಂಡಿದೆ. ಆದರೆ, ಮುಲಾಯಂ ಸಿಂಗ್ ಯಾದವ್ 17 ಸ್ಥಾನಗಳನ್ನು ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ, ಇಂದು ಸಂಜೆ 7 ಗಂಟೆಗೆ ಮುಲಾಯಂ ಸಿಂಗ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.
ಎಡಪಕ್ಷಗಳ ಬದ್ಧವೈರಿ ಎಂದು ಗುರುತಿಸಿಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಯುಪಿಎ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಮೂಲಕ ಎಡಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಉತ್ತರ ಪ್ರದೇಶದಲ್ಲಿ ಮಾಯಾವತಿ ಸೊಕ್ಕಡಗಿಸಲು ಸಮಾಜವಾದಿ ಪಕ್ಷ ಕೈಯೊಂದಿಗೆ ಕೂಡಿಕೆ ನಡೆಸಿರುವುದು ಗುಪ್ತವಾಗೇನೂ ಉಳಿದಿಲ್ಲ.
ಅದರಂತೆ ಎನ್ ಡಿ ಎ ಕೂಡಾ ಈ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ರಾಷ್ಟ್ರೀಯ ಲೋಕದಳ ಪಕ್ಷದ ನಾಯಕ ಅಜಿತ್ ಸಿಂಗ್, ಎನ್ ಡಿ ಎಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಬಿಜೆಪಿ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು.
(ದಟ್ಸ್
ಕನ್ನಡ
ವಾರ್ತೆ)
15
ನೇ
ಲೋಕಸಭೆ
ಚುನಾವಣೆಗಳ
ವೇಳಾಪಟ್ಟಿ