ಗಡಿ ಭಾಗ ಸಮೀಕ್ಷೆ ನಡೆಸಲು ಸರ್ಕಾರ ಸಿದ್ಧ, ಸಿಎಂ
ಮಸ್ಕಿ, (ರಾಯಚೂರು), ಮಾ. 4 : ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಸಮೀಕ್ಷೆಗೆ ಸರ್ಕಾರ ಸಿದ್ಧ. ಗಡಿ ದಾಖಲೆಗಳು ಕಾನೂನು ರೀತಿಯಲ್ಲಿವೆ. ಗಡಿ ಪ್ರಕರಣವನ್ನು ರಾಜಕೀಕರಣಗೊಳಿಸಲು ದೇವೇಗೌಡರು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಸಿದರು.
ಬುಧವಾರ ಪಟ್ಟಣದ ಸಮಾವೇಶವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ಗಡಿ ವಿಚಾರದಲ್ಲಿ ಮಾಜಿ ಪ್ರದಾನಿಗಳು ನೀಡುತ್ತಿರುವ ಹೇಳಿಕೆಗಳಲ್ಲಿ ಯಾವುದೇ ಹುರುಳಿಲ್ಲ ಎಂದರು. ಗಣಿ ಮಾಲೀಕರ ವಿಷಯದಲ್ಲಿ ದೇವೇಗೌಡರು ಅನಗತ್ಯವಾಗಿ ತಗಾದೆ ತೆಗೆಯುತ್ತಿದ್ದಾರೆ. ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ಗಡಿ ಸಮೀಕ್ಷೆಗೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಯಾವ ನ್ಯಾಯಾಲಯದಲ್ಲಿ ಬೇಕಾದರೂ ಹಾಜರುಪಡಿಸುವೆ ಎಂದು ಅವರು ಸವಾಲು ಹಾಕಿದರು. ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ರಾಘವೇಂದ್ರ ದೇವರಾಣೆಗೂ ಸ್ಪರ್ಧಿಸುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಗಡಿಭಾಗದ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವೇಗೌಡ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. ಕಬ್ಬಿಣದ ಅದಿರು ಸಂಪತ್ತು ಇರುವ ಗಡಿ ಭಾಗದ ಒತ್ತುವರಿ ಪ್ರಕರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು. ಅರ್ಧ ಕಿಮೀ ಅಗಲ ಮತ್ತು 36 ಕಿಮೀ ಉದ್ದದಷ್ಟು ರಾಜ್ಯದ ಗಡಿ ಭಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತರು ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಜಂಟಿ ಸಮೀಕ್ಷೆ ನಡೆಸಬೇಕು ಎಂದು ದೇವೇಗೌಡ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications