ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ
ಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ರಾಜ್ಯದಲ್ಲಿ ಹೆಚ್ಚುವರಿ ಚುನಾವಣೆ ಉಸ್ತುವಾರಿ ಹೊಣೆ ಹೊತ್ತಿರುವ ಸಂಸದ ಅನಂತಕುಮಾರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದರಿಂದ ಅವರು ತೀವ್ರ ಬೇಸರಗೊಂಡಿದ್ದಾರೆ. ತಮ್ಮ ಅಸಮಾಧಾನವ್ಯಕ್ತ ಪಡಿಸಿ, ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯಿಂದ ಅವರು ದೂರ ಉಳಿದಿದ್ದಾರೆ.
ವ್ಯಾಪಕ ವಿರೋಧದ ನಡುವೆಯೂ ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ. ರಾಘವೇಂದ್ರರಿಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಸಿಎಂ ಪುತ್ರ ಎಂಬಕಾರಣಕ್ಕೆ ಹಿರಿಯ ಕಾರ್ಯಕರ್ತರನ್ನು ಕಡೆಗಣಿಸಿ, ರಾಘವೇಂದ್ರ ಅವರಿಗೆ ಟಿಕೆಟ್ ನೀಡಬಾರದು ಎಂದು ಶಿವಮೊಗ್ಗ ಜಿಲ್ಲಾ ಘಟಕ ಸ್ಪಷ್ಟವಾಗಿ ಒತ್ತಾಯಿಸಿತ್ತು. ಪಕ್ಷದ ದಿಲ್ಲಿ ವರಿಷ್ಠರಿಗೂ ದೂರು ರವಾನೆಯಾಗಿತ್ತು.
ಈ ಸಂಬಂಧ ಮಧ್ಯಸ್ಥಿಕೆ ವಹಿಸಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ರಾಘವೇಂದ್ರರಿಗೆ ಟಿಕೆಟ್ ಕೊಡಿಸುವ ಪ್ರಯತ್ನ ಕೈಬಿಡುವಂತೆಯೂ ಯಡಿಯೂರಪ್ಪನವರಿಗೆ ಕಿವಿಮಾತು ಹೇಳಿದ್ದರು. ಇದ್ಯಾವುದಕ್ಕೂ ಜಗ್ಗದ ಯಡಿಯೂರಪ್ಪನವರು ತಾವು ಹಿಡಿದ ಹಠ ಸಾಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
(ಸ್ನೇಹಸೇತು: ವಿಜಯಕರ್ನಾಟಕ)