ದಾವಣಗೆರೆ ಈದ್ ಮೆರವಣಿಗೆ ಮೇಲೆ ಕಲ್ಲು ತೂರಾಟ
ದಾವಣಗೆರೆ, ಮಾ. 10 : ಈದ್ ಉಲ್ ಫಿತ್ರ್ ಹಬ್ಬದ ನಿಮಿತ್ತ ಇಂದು ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಗರದ ಮಂಡಿಪೇಟೆ ಬಳಿ ಇರುವ ಸ್ಟೇಟ್ ಬ್ಯಾಂಕ್ ಮೈಸೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಘಟನೆಯ ಹಿನ್ನೆಲೆಯಲ್ಲಿ ನೂಕು ನುಗ್ಗಲು ಆರಂಭವಾಗಿ ಕೆಲ ಕಾಲ ನಗರದಾದ್ಯಂತ ಉದ್ವಿಗ್ನ ಸ್ಥಿತಿ ನಿರ್ಮಾಣ ಉಂಟಾಗಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈದ್ ಉಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಲು ಮೆರವಣಿಗೆ ಮೂಲಕ ತೆರಳುತ್ತಿದ್ದರು. ಮಂಡಿಪೇಟೆ ಹತ್ತಿರವಿರುವ ಸ್ಟೇಟ್ ಬ್ಯಾಂಕ್ ಅಫ್ ಮೈಸೂರು ಬಳಿ ಮೆರವಣಿಗೆ ಬರುತ್ತಿದ್ದಂತೆಯೇ ಮೆರವಣಿಗೆಯತ್ತ ಕಲ್ಲು ತೂರಾಟ ಆರಂಭವಾಯಿತು. ಜನರು ಗಲಿಬಿಲಿಗೊಂಡಿದ್ದರಿಂದ ನೂಕುನುಗ್ಗಲು ಆರಂಭವಾಯಿತು. ಆಗ ಜನರು ಅತ್ತಿತ್ತ ಓಡಾಡತೊಡಗಿದರು. ಈ ಸಂದರ್ಭದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಕಲ್ಲು ತೂರಾಟದಲ್ಲಿ ಹಲವರಿಗೆ ಗಾಯವಾಗಿರುವ ಘಟನೆಯೂ ನಡೆದಿದೆ.
ತಕ್ಷಣ ಪರಿಸ್ಥಿತಿ ಅರಿತು ವ್ಯಾಪಕ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಗರದ ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಸುಮಾರು ಎರಡು ಗಂಟೆ ಕಾಲ ನಗರದಲ್ಲಿ ತ್ವೇಷಮಯ ಸ್ಥಿತಿ ನಿರ್ಮಾಣವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಭಾರಿ ಬಂದೋಬಸ್ತ್ ನಿಯೋಜಿಸಿದ್ದರಿಂದ ಯಾವುದೇ ಅಹಿತಕರ ಘಟನೆ ಜರುಗಿದ ವರದಿಯಾಗಿಲ್ಲ, ಸಂಜೆ ವೇಳೆಗೆ ಪರಿಸ್ಥಿತಿ ಸಂಪೂರ್ಣ ಹತೋಟಿಗೆ ಬಂದಿದೆ ಎಂದು ದಾವಣಗೆರೆ ಪೊಲೀಸ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications